ಪುತ್ತೂರು: ಒಳಮೊಗ್ರು ಗ್ರಾಮದ ಹೃದಯಭಾಗದಲ್ಲಿರುವ ಕೈಕಾರ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಂಭ್ರಮದಲ್ಲಿದ್ದು, ಶತಮಾನೋತ್ಸವ ಸಮಾರಂಭವು ಫೆ.14 ಮತ್ತು 15ರಂದು ನಡೆಯಲಿದ್ದು, ಈ ಸಂದರ್ಭ ನೂತನ ಸಾಂಸ್ಕೃತಿಕ ಸಭಾಭವನ. ವೇದಿಕೆ, ರಂಗಮಂದಿರದ ಉದ್ಘಾಟನೆ ಕಾರ್ಯಕ್ರಮ ಮತ್ತು ಸಭಾ ಕಾರ್ಯಕ್ರಮ, ಶಾಲಾ ಮಕ್ಕಳಿಂದ ಮತ್ತು ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗು ಹಿರಿಯ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಸನ್ಮಾನ ಹಾಗು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಶತಮಾನೋತ್ಸವ ಸಮಿತಿ ಸಂಚಾಲಕ ಸೀತಾರಾಮ ರೈ ಚೆಲ್ಯಡ್ಕ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.
ಫೆ.14ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಕೈಕಾರ ಶಾಲೆಯ ನಿವೃತ್ತ ಮುಖ್ಯಶಿಕ್ಷಕ ವೆಂಕಪ್ಪ ಗೌಡ ಧ್ವಜಾರೋಹಣ ಮಾಡಲಿದ್ದಾರೆ. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶೀಲಾವತಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಶಿವರಾಮ ಶೆಟ್ಟಿ ಕೈಕಾರ ಅವರು ನೂತನ ಧ್ವಜಸ್ತಂಭಲೋಕಾರ್ಪಣೆ ಮಾಡಲಿದ್ದಾರೆ. ಸಂಜೆ ಗಂಟೆ 5.30ಕ್ಕೆ ನಡೆಯುವ ಶತಮಾನೋತ್ಸವ ಉದ್ಘಾಟನಾ ಸಮಾರಂಭದಲ್ಲಿ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಅವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶತಮಾನೋತ್ಸವವನ್ನು ಉದ್ಘಾಟಿಸಲಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸದ ಕ್ಯಾ। ಬ್ರಿಜೇಶ್ ಚೌಟ ಅವರು ಬಹುಮಾನ ವಿತರಿಸಲಿದ್ದಾರೆ. ಮುಂಬೈ ಹೇರಂಬ ಇಂಡಸ್ಟ್ರೀಸ್ನ ಕೂಳೂರು ಕನ್ಯಾನ ಸದಾಶಿವ ಶೆಟ್ಟಿಯವರು ಶಾಲೆಯ ಸಾಧಕರಲ್ಲಿ ನೂರು ಮಂದಿ ಹಿರಿಯ ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಕರನ್ನು ಸನ್ಮಾನಿಸಲಿದ್ದಾರೆ. ಎಮ್ಆರ್ಪಿಎಲ್ ಗ್ರೂಪ್ನ ಜನರಲ್ ಮೆನೇಜರ್ ಕೃಷ್ಣ ಹೆಗ್ಡೆಯವರು ಶತಮಾನೋತ್ಸವ ಸಾಂಸ್ಕೃತಿಕ ಭವನ ಉದ್ಘಾಟಿಸಲಿದ್ದಾರೆ. ವಿಜಯ ಮಂಜುನಾಥ ಶೆಟ್ಟಿ ಕೈಕಾರ ಅವರು ಪನಡ್ಕ ಮಂಜುನಾಥ ಶೆಟ್ಟಿ ವೇದಿಕೆಯನ್ನು ಉದ್ಘಾಟಿಸಲಿದ್ದಾರೆ. ಮುಂಡಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತಸರ ಕೆ.ಕೆ.ಶೆಟ್ಟಿಯವರು ಕೈಕಾರ ಕುಸುಮ ಸುಬ್ಬಣ್ಣ ಶೆಟ್ಟಿ ರಂಗಮಂದಿರವನ್ನು ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಒಳಮೊಗ್ರು ಗ್ರಾ.ಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಒಳಮೊಗ್ರು ಗ್ರಾ.ಪಂ ಉಪಾಧ್ಯಕ್ಷ ಅಶ್ರಫ್ ಉಜಿರೋಡಿ ಸಹಿತ ಹಲವಾರು ಮಂದಿ ಗಣ್ಯರು ಅತಿಥಿಗಳಾಗಿ ಭಾವಹಿಸಲಿದ್ದಾರೆ.
ಫೆ.15ಕ್ಕೆ ಮಧ್ಯಾಹ್ನ ಗಂಟೆ 12 ಕ್ಕೆ ಸಭಾ ಕಾರ್ಯಕ್ರಮದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಆದರ್ಶ ಆಸ್ಪತ್ರೆಯ ಡಾ. ಎಂ.ಕೆ.ಪ್ರಸಾದ್ ಅವರು ಬಹುಮಾನ ವಿತರಿಸಲಿದ್ದಾರೆ. ದೈಹಿಕ ಶಿಕ್ಷಣ ಪರಿವೀಕ್ಷಕ ಚಕ್ರಪಾಣಿ, ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ನವೀನ್ ವೇಗಸ್ ಸಹಿತ ಅನೇಕರ ಮಂದಿ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ ಗಂಟೆ 5ಕ್ಕೆ ಶತಮಾನೋತ್ಸವ ಕಾರ್ಯಕ್ರಮದ ಸಮಾರೋಪ ನಡೆಯಲಿದೆ. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಭೋಜೇ ಗೌಡ, ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕರಾದ ಸಂಜೀವ ಮಠಂದೂರು, ಮಲ್ಲಿಕಾ ಪ್ರಸಾದ್ ಸಹಿತ ಅನೇಕ ಮಂದಿ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಫೆ.14ರಂದು ಮಧ್ಯಾಹ್ನ ಗಂಟೆ 3 ರಿಂದ ಕೈಕಾರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಬಳಿಕ ವಿಠಲ ನಾಯಕ್ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ. ರಾತ್ರಿ ಗಂಟೆ 8ಕ್ಕೆ ಕೈಕಾರ ಶಾಲಾ ಮಕ್ಕಳಿಂದ ಮತ್ತು ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಲಾ ಸೌರಭ, ಗೀತ್ ಮ್ಯೂಸಿಕಲ್ಸ್ ಮಂಗಳೂರು ಕರುಣಾಕರ್ ಇವರಿಂದ ದ್ವಿ ಕಂಠ ಸಿರಿ ಗಾಯನ, ಅಶೋಕ್ ಪೊಳಲಿ ಅವರಿಂದ ವಿಭಿನ್ನ ಶೈಲಿಯ ನೃತ್ಯ ಕಾರ್ಯಕ್ರಮ ನಡೆಯಲಿದೆ. ಫೆ.15ಕ್ಕೆ ಬೆಳಿಗ್ಗೆ ಗಂಟೆ 10.30ಕ್ಕೆ ಶ್ರೀ ವಿಷ್ಣು ಕಲಾ ತಂಡ ದೂಮಡ್ಕ ಇರ್ದೆ ಇವರಿಂದ ನೃತ್ಯ ವೈಭವ ನಡೆಯಲಿದೆ. ಮಧ್ಯಾಹ್ನ ಗಂಟೆ 2ಕ್ಕೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಹಾಗು ಗಾನಸುರಭಿ ರವಿಚಂದ್ರ ಕನ್ನಡಿಕಟ್ಟೆ ಬಳಗದವರಿಂದ ಯಕ್ಷಗಾನ ಬಯಲಾಟ ದಕ್ಷ ಯಜ್ಞ ಪ್ರದರ್ಶನಗೊಳ್ಳಲಿದೆ. ರಾತ್ರಿ ಗಂಟೆ 8ಕ್ಕೆ ಹಿರಿಯ ವಿದ್ಯಾರ್ಥಿಗಳು ಮತ್ತು ಬಳಗದವರಿಂದ ತುಳು ಹಾಸ್ಯಭರಿತ ನಾಟಕ ‘ಮರ್ಲ್ ಕಟ್ಟೋರ್ಚಿ’ ಪ್ರದರ್ಶನಗೊಳ್ಳಲಿದೆ ಎಂದು ಸೀತಾರಾಮ ರೈ ಚೆಲ್ಯಡ್ಕ ಹೇಳಿದರು.
1983ರವರೆಗೆ 1 ರಿಂದ 5ನೇ ತರಗತಿವರೆಗೆ, 1983ರಿಂದ ಹಿರಿಯ ಪ್ರಾಥಮಿಕ ಶಾಲೆಯಾಗಿ ಉನ್ನತೀಕರಣಗೊಂಡು ಪ್ರಸ್ತುತ 7ನೇ ತರಗತಿವರೆಗೆ ವಿದ್ಯಾರ್ಜನೆಯನ್ನು ನೀಡುತ್ತಿರುವುದು ಸಂತಸದ ವಿಷಯ. 2019ರಲ್ಲಿ ಆಂಗ್ಲ ಮಾಧ್ಯಮದಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ. ತರಗತಿಗಳನ್ನು ಆರಂಭಿಸಿ ಸುಮಾರು 200 ಪುಟಾಣಿಗಳು ಮುಂದಡಿಯಿಟ್ಟಿದ್ದಾರೆ. ಪ್ರಸ್ತುತ ವರ್ಷ ಶತಮಾನೋತ್ಸವ ಆಚರಣೆಯ ಸವಿ ನೆನಪಿಗಾಗಿ ಆಂಗ್ಲಮಾಧ್ಯಮ ತರಗತಿಗಳನ್ನು ಆರಂಭಿಸಲಾಗಿದ್ದು ಸರಕಾರದ ಅನುಮೊದನೆಯೂ ದೊರಕಿರುವುದು ಸಂತಸದ ವಿಷಯ ಎಂದು ಸೀತಾರಾಮ ರೈ ಚೆಲ್ಯಡ್ಕ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಕೈಕಾರ ಶಾಲಾ ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಶಿವರಾಮ ಶೆಟ್ಟಿ ಶಿವಸದನ, ಬಿಲ್ಲಾಜೆ, ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಪ್ರಭಾರ ಮುಖ್ಯಗುರು ರಾಮಣ್ಣ ರೈ, ಎಲ್.ಕೆ.ಜಿ.ಯು.ಕೆ.ಜಿ ಬೆಟರ್ಮೆಂಟ್ ಕಮಿಟಿಯ ಅಧ್ಯಕ್ಷ ಸಂಜಿತ್ ರೈ ತೊಟ್ಲ ಉಪಸ್ಥಿತರಿದ್ದರು.