ಮಂಗಳೂರು:ಎಸ್ಸಿಡಿಸಿಸಿ ಬ್ಯಾಂಕ್ ನಿಂದ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯವನ್ನು ಮಂಗಳವಾರ ದೀಪ ಪ್ರಜ್ವಲಿಸಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತ್ತು .ಬಳಿಕ ಮಾತಾಡಿದ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು, “ನಮ್ಮ ಬ್ಯಾಂಕ್ ಇತರ ಬ್ಯಾಂಕ್ ಗಳಿಗಿಂತ ಹಿಂದೆ ಉಳಿಯಬಾರದು ಎಂಬ ಉದ್ದೇಶದಿಂದ ಈ ಆಧುನಿಕ ಬ್ಯಾಂಕಿಂಗ್ ಸೌಲಭ್ಯವನ್ನು ಅಳವಡಿಸಿಕೊಳ್ಳಲಾಗಿದೆ. ನಮ್ಮ ಶಾಖೆಯಲ್ಲಿ ಬಹುತೇಕ ಎಲ್ಲ ಸೇವೆಗಳನ್ನು 15-20 ವರ್ಷಗಳ ಹಿಂದೆಯೇ ಅಳವಡಿಸಿಕೊಂಡು ಗ್ರಾಹಕ ಸ್ನೇಹಿಯಾಗಿ ಮುನ್ನಡೆಯುತ್ತಿದೆ.
ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್) ಅತ್ಯಾಧುನಿಕ ತಂತ್ರಜ್ಞಾನದ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುವ ಮೂಲಕ ಹೆಸರುವಾಸಿಯಾಗಿದೆ. ಇದಕ್ಕೆ ಸಹಕಾರ ನೀಡಿದ ಎಲ್ಲರಿಗೂ ಅಭಿನಂದನೆಗಳು“ ಎಂದರು.
ಆಧುನಿಕ ಸೌಲಭ್ಯಗಳ ಕುರಿತು ಮಾಹಿತಿ ನೀಡಿದ ಟೆಕ್ನಿಕಲ್ ಝೋನೆಂಟ್ ಸಾಫ್ಟವೆರ್ ಜೆನಿತ್ ತಾಂತ್ರಿಕ ಸಾಫ್ಟ್ವೇರ್ ನಂದಕುಮಾರ್ ಮಾತನಾಡಿ , ”ಐಎಂಪಿಎಸ್ ಅಂದ್ರೆ ಅದರ ಮೂಲಕ ಎಲ್ಲಕ್ಕಿಂತ ಶೀಘ್ರವಾಗಿ ತಕ್ಷಣವೇ ಹಣವನ್ನು ವರ್ಗಾವಣೆ ಮಾಡಲು ಸಾಧ್ಯವಿದೆ. ಈ ಸೇವೆಯ ಮೂಲಕ ನಮ್ಮ ಬ್ಯಾಂಕಿನ ಮೊಬೈಲ್ ಅಪ್ಲಿಕೇಶನ್ ಬಳಸಿ ಗ್ರಾಹಕರು ಕ್ಷಣಾರ್ಧದಲ್ಲಿ ಹಣ ವರ್ಗಾವಣೆ ಮಾಡುವ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಐಎಂಪಿಎಸ್ ಎಂಬುದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಅಭಿವೃದ್ಧಿ ಪಡಿಸಿದ ತ್ವರಿತ ಹಣ ವರ್ಗಾವಣೆ ವ್ಯವಸ್ಥೆಯಾಗಿದ್ದು, ಇದು 24×7, ವಾರಾಂತ್ಯ ಮತ್ತು ಸಾರ್ವಜನಿಕ ರಜೆ ದಿನಗಳಲ್ಲಿಯೂ ಕಾರ್ಯನಿರ್ವಹಿಸುತ್ತದೆ. P2A (person to Account) ಮೂಲಕ ಖಾತೆ ಸಂಖ್ಯೆ ಮತ್ತು IFSC ಬಳಸಿ ಯಾವುದೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬಹುದು. ಈಗ ಎಲ್ಲಾ ಕಡೆ ಡಿಜಿಟಲ್ ವ್ಯವಹಾರ ಆಗಿರುವ ಕಾರಣ ಯುಪಿಐ ಮೂಲಕ ಹಣಕಾಸಿನ ನಿರ್ವಹಣೆ ಸುಲಭ. ಕಳೆದ ಐದು ವರ್ಷಗಳ ಹಿಂದೆ ಬ್ಯಾಂಕ್ ಅಧ್ಯಕ್ಷರು ತಮ್ಮ ಗ್ರಾಹಕರಿಗೆ ಈ ಸೇವೆಯನ್ನು ಕಲ್ಪಿಸುವ ಯೋಚನೆ ಮಾಡಿದ್ದರು. ಅದು ಇಂದು ಸಾಕಾರವಾಗಿದೆ“ ಎಂದರು.
ವೇದಿಕೆಯಲ್ಲಿ ಬ್ಯಾಂಕ್ ಉಪಾಧ್ಯಕ್ಷರಾದ ಬ್ಯಾಂಕ್ ನಿರ್ದೇಶಕರಾದ ವಿನಯ್ ಕುಮಾರ್ ಸೂರಿಂಜೆ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಭಾಸ್ಕರ್ ಕೋಟ್ಯಾನ್, ರಮೇಶ್, ಬ್ಯಾಂಕ್ ಸಿಇಒ ಗೋಪಾಲಕೃಷ್ಣ ಭಟ್ ಹಾಗೂ ಬ್ಯಾಂಕ್ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬೊಳ್ಯೊಟ್ಟು ಪ್ರಾಸ್ತಾವಿಕ ಮಾತನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು.ಚಿತ್ರಲೇಖ ದೇವರನ್ನು ಸ್ತುತಿಸಿದರು. ರಾಜೀವ ಕಕ್ಕೆಪದವು ಕಾರ್ಯಕ್ರಮ ನಿರ್ವಹಿಸಿದರು.