ಕಾರ್ಕಳ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿ ಬಂಧನ

ಉಡುಪಿ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಪುತ್ತೂರು ನೆಲ್ಯಾಡಿ ನಿವಾಸಿ ಸುದೀಪ್ ರೈ ಮತ್ತು ಕಾರ್ಕಳ ಕಜೆ ನಿವಾಸಿ, ಪುತ್ತೂರು ಸಬ್ ರಿಜಿಸ್ಟ್ರಾರ್ ಕಚೇರಿ ಉದ್ಯೋಗಿ ಸೌಮ್ಯ ಶೆಟ್ಟಿ ಫೆ.17ರಂದು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಆದರೆ ಮದುವೆಯಾದ ಕೇವಲ ಒಂದು ತಿಂಗಳಲ್ಲೇ ಮಾ.17ರಂದು ಸುದೀಪ್ ರೈ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುದೀಪ್ ರೈ ಮಾ.30ರಂದು ಮೃತಪಟ್ಟಿದ್ದರು.


ಮಗನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಸುದೀಪ್ ಅವರ ತಂದೆ ದಾಮೋದರ ರೈ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿ ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ್ದಾರೆ.
ಮೃತರ ತಂದೆ ನೀಡಿದ ದೂರಿನಂತೆ ತನಿಖೆ ನಡೆಸಿದ್ದು, ಪ್ರಾಥಮಿಕ ಸಾಕ್ಷ್ಯಾಧಾರಗಳ ಮೇರೆಗೆ ಸೌಮ್ಯ ಶೆಟ್ಟಿ ಅವರನ್ನು ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!