ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (SUIET) ವತಿಯಿಂದ ಏಪ್ರಿಲ್ 29 ಮತ್ತು 30ರಂದು ‘ಹೊಸತಾಗಿ ಬೆಳೆಯುತ್ತಿರುವ ಸಮನ್ವಯ ವಿಜ್ಞಾನ ಮತ್ತು ತಂತ್ರಜ್ಞಾನ’ (ICESST-2026) ಕುರಿತು ಅಂತರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಡೀನ್ ಡಾ. ರಾಮಕೃಷ್ಣ ಎನ್. ಹೆಗ್ಡೆ ತಿಳಿಸಿದರು .
ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಏಪ್ರಿಲ್ 29ರಂದು ಬೆಳಿಗ್ಗೆ 11 ಗಂಟೆಗೆ ಮುಕ್ಕದ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯುವ ಉದ್ಘಾಟನಾ ಸಮಾರಂಭವನ್ನು ಭಾರತದ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಹಾಗೂ ಇಸ್ರೋ (ISRO) ಮಾಜಿ ಅಧ್ಯಕ್ಷ ಪದ್ಮಶ್ರೀ ಎ. ಎಸ್. ಕಿರಣ್ ಕುಮಾರ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮಕ್ಕೆ ಶ್ರೀನಿವಾಸ್ ವಿಶ್ವವಿದ್ಯಾಲಯದ ಗೌರವಾನ್ವಿತ ಚಾನ್ಸೆಲರ್ ಡಾ. ಎ. ಶ್ರೀನಿವಾಸ್ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ಸಮ್ಮೇಳನದಲ್ಲಿ ವಿಶ್ವವಿದ್ಯಾಲಯದ ಟ್ರಸ್ಟಿಗಳಾದ ಎ. ವಿಜಯಲಕ್ಷ್ಮಿ ಆರ್. ರಾವ್, ಪ್ರೊ. ಎ. ಮಿತ್ರ ಎಸ್. ರಾವ್, ಉಪಕುಲಪತಿ ಡಾ. ಕೆ. ಸತ್ಯನಾರಾಯಣ ರೆಡ್ಡಿ ಹಾಗೂ ಐಇಇಇ (IEEE) ಮಂಗಳೂರು ವಿಭಾಗದ ಅಧ್ಯಕ್ಷ ಡಾ. ವೇಣುಗೋಪಾಲ ಪಿ. ಎಸ್. ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಮ್ಮೇಳನದ ಸಂಚಾಲಕರಾಗಿ ಪ್ರೊ. ಗೌರವ್ ಪ್ರಸಾದ್ ಕಾರ್ಯನಿರ್ವಹಿಸಲಿದ್ದಾರೆ.
ಶ್ರೀನಿವಾಸ್ ವಿಶ್ವವಿದ್ಯಾಲಯವು ಹಲವು ವರ್ಷಗಳಿಂದ ಅಂತರಾಷ್ಟ್ರೀಯ ತಾಂತ್ರಿಕ ಸಮ್ಮೇಳನಗಳನ್ನು ಆಯೋಜಿಸುತ್ತಿದ್ದು, ಈ ಬಾರಿ ಐಇಇಇ (IEEE) ಬೆಂಗಳೂರು ಮತ್ತು ಮಂಗಳೂರು ವಿಭಾಗಗಳ ಸಹಭಾಗಿತ್ವದಲ್ಲಿ ಇದೇ ಮೊದಲ ಬಾರಿಗೆ ಈ ಸಮ್ಮೇಳನವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು .
ಜಾಗತಿಕ ಮಟ್ಟದ ಈ ಸಮ್ಮೇಳನವು ಸಂಶೋಧಕರು, ಶೈಕ್ಷಣಿಕ ವಲಯದ ಸಾಧಕರು ಹಾಗೂ ವಿದ್ಯಾರ್ಥಿಗಳಿಗೆ ತಮ್ಮ ಸಂಶೋಧನಾ ಪ್ರಬಂಧಗಳನ್ನು ಪ್ರಸ್ತುತಪಡಿಸಲು ಮತ್ತು ವಿಜ್ಞಾನ-ತಂತ್ರಜ್ಞಾನ ಕ್ಷೇತ್ರದ ಇತ್ತೀಚಿನ ಸವಾಲುಗಳ ಬಗ್ಗೆ ಚರ್ಚಿಸಲು ಉತ್ತಮ ವೇದಿಕೆಯಾಗಲಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ರಾಮ ನರಸಿಂಹ ಹಾಗೂ ಸಮ್ಮೇಳನದ ಸಂಚಾಲಕ ಪ್ರೊ. ಗೌರವ್ ಪ್ರಸಾದ್ ಉಪಸ್ಥಿತರಿದ್ದರು.