ಕಾರ್ಮಿಕರೇ ದೇಶದ ಅಭಿವೃದ್ಧಿಯ ಶಿಲ್ಪಿಗಳು: ಸಿದ್ದರಾಮಯ್ಯ

ಬೆಂಗಳೂರು, ಮೇ 2: ಕಾರ್ಮಿಕರು ದೇಶದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಯ ಶಿಲ್ಪಿಗಳಾಗಿದ್ದು, ಅವರ ಶ್ರಮವೇ ರಾಷ್ಟ್ರ ನಿರ್ಮಾಣದ ಮೂಲಶಕ್ತಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಕಾಯಕವೇ ಕೈಲಾಸ” ಎಂದು ಬಸವಣ್ಣ ಹೇಳಿರುವುದನ್ನು ಉಲ್ಲೇಖಿಸಿದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ದೊರೆಯಬೇಕು. ಕಾರ್ಮಿಕರು ದೇಶದ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಅವಿಭಾಜ್ಯ ಅಂಗ ಎಂದು ಹೇಳಿದರು.

ದೇಶದಲ್ಲಿ 75 ಶೇಕಡಕ್ಕೂ ಹೆಚ್ಚು ಅಸಂಘಟಿತ ಕಾರ್ಮಿಕರಿದ್ದು, ಕೇಂದ್ರ ಸರ್ಕಾರ ಕಾರ್ಮಿಕರ ಪರವಾಗಿಲ್ಲದೆ ಕಾರ್ಪೊರೇಟ್ ಸಂಸ್ಥೆಗಳ ಪರವಾಗಿದೆ ಎಂದು ಅವರು ಆರೋಪಿಸಿದರು.

ರಾಜ್ಯ ಸರ್ಕಾರ ಸದಾ ಕಾರ್ಮಿಕರ ಪರವಾಗಿದ್ದು, ಹಲವು ಸೌಲಭ್ಯಗಳನ್ನು ಒದಗಿಸಿದೆ ಎಂದ ಅವರು, ಕೆಲಸದ ವೇಳೆ ಮೃತಪಟ್ಟ ಕಾರ್ಮಿಕರ ಪರಿಹಾರ ಮೊತ್ತವನ್ನು ₹5 ಲಕ್ಷದಿಂದ ₹8 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು. ಸಹಜ ಮರಣ ಹೊಂದಿದವರ ಅಂತ್ಯಕ್ರಿಯೆಗೆ ನೀಡುತ್ತಿದ್ದ ₹75 ಸಾವಿರ ನೆರವನ್ನು ₹1.5 ಲಕ್ಷಕ್ಕೆ ಏರಿಸಲಾಗಿದೆ ಎಂದರು.

ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ ಹಾಗೂ ತಾವು ಚರ್ಚಿಸಿ ಕಾರ್ಮಿಕರಿಗೆ ನೆರವಾಗುವ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ ಎಂದರು.

ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ 30,256 ಗಿಗ್ ಕಾರ್ಮಿಕರನ್ನು ನೋಂದಾಯಿಸಲಾಗಿದ್ದು, ಅಪಘಾತದಲ್ಲಿ ಮೃತಪಟ್ಟವರಿಗೆ ₹4 ಲಕ್ಷ ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಈಗಾಗಲೇ ಐದು ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್, ಸಲೀಂ ಅಹಮದ್, ಹೆಚ್.ಎಂ. ರೇವಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!