ಪುತ್ತೂರು, ಜೂನ್ 13: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) 10ನೇ ಬಟಾಲಿಯನ್ ತಂಡದ ವತಿಯಿಂದ ಪುತ್ತೂರಿನ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ವಿಪತ್ತು ನಿರ್ವಹಣಾ ಜಾಗೃತಿ ಹಾಗೂ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
10ನೇ ಬಟಾಲಿಯನ್ನ ಇನ್ಸ್ಪೆಕ್ಟರ್ ಶಾಂತಿಲಾಲ್ ಜಾಟಿಯಾ ಅವರ ನೇತೃತ್ವದಲ್ಲಿ ಎಎಸ್ಐ ಸುಭಾಷ್ ಶಿಂಧೆ ಹಾಗೂ ತಂಡದ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ವಿಪತ್ತುಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಪ್ರವಾಹ, ಭೂಕುಸಿತ, ಚಂಡಮಾರುತ, ಸುನಾಮಿ ಹಾಗೂ ಅಗ್ನಿ ಅವಘಡಗಳ ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಸ್ವಯಂ ರಕ್ಷಣೆ ಮತ್ತು ತುರ್ತು ಪರಿಸ್ಥಿತಿಯಲ್ಲಿ ಪ್ರತಿಕ್ರಿಯಿಸುವ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. ಜೊತೆಗೆ ಸಿಪಿಆರ್ (CPR), ಪ್ರಥಮ ಚಿಕಿತ್ಸೆ, ಗಾಯಾಳುಗಳ ಸುರಕ್ಷಿತ ಸ್ಥಳಾಂತರ ಹಾಗೂ ಪ್ರವಾಹ ರಕ್ಷಣಾ ತಂತ್ರಗಳ ಪ್ರಾಯೋಗಿಕ ಪ್ರದರ್ಶನ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲ ಸತೀಶ್ ಕುಮಾರ್ ರೈ, ಉಪ ಪ್ರಾಂಶುಪಾಲ ಕೃಷ್ಣ ಮೋಹನ್ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಸುಮಾರು 1,550 ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಕಾರ್ಯಕ್ರಮದ ಪ್ರಯೋಜನ ಪಡೆದರು.