ಬಂಟ್ವಾಳ: ನೆಟ್ಲ ಮುಡ್ನೂರು ಗ್ರಾ.ಪಂ ವ್ಯಾಪ್ತಿಯ ಪಂತಡ್ಕದ ರಸ್ತೆ ಬದಿಯಲ್ಲಿ ತ್ಯಾಜ್ಯ ರಾಶಿ ಬಿದ್ದಿದ್ದು, ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಪಂಚಾಯಿತಿಯು ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.
ಸಾರ್ವಜನಿಕ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಕಸ, ಕೊಳೆತ ಹಣ್ಣು, ತರಕಾರಿ ಮತ್ತು ಹೋಟೆಲ್ ಗಳ ಉಳಿಕೆ ಆಹಾರವನ್ನು ಎಸೆಯಲಾಗುತ್ತಿದೆ. ತ್ಯಾಜ್ಯ ರಾಶಿ ದುರ್ವಾಸನೆ ಬೀರುತ್ತಿದ್ದರೂ ಗ್ರಾಪಂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಗಮನ ಹರಿಸಿಲ್ಲ ಎಂದು ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದುರ್ವಾಸನೆ ಈ ಪ್ರದೇಶ ವ್ಯಾಪಿಸಿ ಪ್ರತಿನಿತ್ಯ ಓಡಾಡುವ ಶಾಲಾ ಮಕ್ಕಳು, ಪಾದಾಚಾರಿಗಳು ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಅಷ್ಟೇ ಅಲ್ಲದೆ ಕಸದ ರಾಶಿ ಮೇಲೆ ಮಳೆ ನೀರು ಬಿದ್ದಾಗ ಅಲ್ಲಿ ರೋಗಗಳನ್ನು ಸೃಷ್ಟಿಸುವ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದೆ. ಹೀಗಾಗಿ ಕಸ ಹಾಕುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅವರಿಗೆ ದುಬಾರಿ ದಂಡ ವಿಧಿಸಿ ಕಸವನ್ನು ಅವದಿಂದಲೇ ವಿಲೇವಾರಿ ಮಾಡಿಸಬೇಕು ಎಂದು ಸಾರ್ವಜನಿಕರು ಆಗ್ರಹ ಮಾಡಿದ್ದಾರೆ.