ವಿದ್ಯಾರ್ಥಿಗಳು ಜ್ಞಾನಾರ್ಜನೆಗೆ ತಂತ್ರಜ್ಞಾನ ಬಳಸಬೇಕು: ಎಂ.ಎಲ್. ಅಶ್ವಿನಿ

ಕಾಸರಗೋಡು: ಸ್ಮಾರ್ಟ್‌ಫೋನ್ ಸೇರಿದಂತೆ ಆಧುನಿಕ ತಂತ್ರಜ್ಞಾನ ವ್ಯವಸ್ಥೆಗಳನ್ನು ಕೇವಲ ಮನರಂಜನೆಗಾಗಿ ಮಾತ್ರವಲ್ಲದೆ ಜ್ಞಾನಾರ್ಜನೆ ಹಾಗೂ ಶಿಕ್ಷಣದ ಉದ್ದೇಶಕ್ಕೂ ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಕರೆ ನೀಡಿದರು.

ಮಧೂರು ಎಸ್‌ಸಿ-ಎಸ್‌ಟಿ ಪಂಚಾಯತ್ ಸಮಿತಿಯ ವತಿಯಿಂದ ಕೂಡ್ಲು ಗೋಪಾಲಕೃಷ್ಣ ವಿದ್ಯಾಲಯದಲ್ಲಿ ಆಯೋಜಿಸಲಾದ ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಂತ್ರಜ್ಞಾನವನ್ನು ವಿದ್ಯಾರ್ಥಿಗಳು ದುರುಪಯೋಗಪಡಿಸಿಕೊಳ್ಳದಂತೆ ಪೋಷಕರು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ ಅವರು, ಕಳೆದ 12 ವರ್ಷಗಳಲ್ಲಿ ಶಿಕ್ಷಣ ಸೇರಿದಂತೆ ಮೂಲಸೌಕರ್ಯ ಕ್ಷೇತ್ರಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮಹತ್ವದ ಹೂಡಿಕೆ ಮಾಡಿದೆ ಎಂದು ಹೇಳಿದರು.

ಅಲ್ಲದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವು ಪರಿಣಾಮಕಾರಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯದಿಂದ ನೀಡಲಾಗುವ ‘ಬಿರ್ಸಾ ಮುಂಡಾ ಅನ್ಸಂಗ್ ಹೀರೋ’ ಪ್ರಶಸ್ತಿ ಪಡೆದ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸಂಜೀವ ಪುಲಿಕ್ಕೂರು ಅವರನ್ನು ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ಹಾಗೂ ಮಧೂರು ಪಂಚಾಯತ್ ಸಮಿತಿಯ ಪರವಾಗಿ ಎಂ.ಎಲ್. ಅಶ್ವಿನಿ ಸನ್ಮಾನಿಸಿದರು.

ಎಸ್‌ಸಿ-ಎಸ್‌ಟಿ ಮೋರ್ಚಾ ಮಧೂರು ಪಂಚಾಯತ್ ಸಮಿತಿ ಅಧ್ಯಕ್ಷ ಮೋಹನನ್ ಕಾಳಿಯಂಗಾಡ್ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಸಮಿತಿ ಸದಸ್ಯ ಹಾಗೂ ಜಿಲ್ಲಾ ಪಂಚಾಯತ್ ಪ್ರತಿನಿಧಿ ರಾಮಪ್ಪ ಮಂಜೇಶ್ವರ, ಮಧೂರು ಪಂಚಾಯತ್ ಅಧ್ಯಕ್ಷೆ ಸುಜ್ಞಾನಿ ಶಾನ್‌ಭಾಗ್, ಉಪಾಧ್ಯಕ್ಷ ಭಾನುಪ್ರಕಾಶ್, ಸಂಜೀವ ಪುಲಿಕ್ಕೂರು, ಸುಕುಮಾರ್ ಕುದ್ರೆಪ್ಪಾಡಿ, ಮಧೂರು ಪಂಚಾಯತ್ ಪ್ರದೇಶ ಅಧ್ಯಕ್ಷರಾದ ಮಾಧವ ಮಾಸ್ಟರ್ ಮತ್ತು ಮಹೇಶ್ ಮಧೂರು, ಎಸ್‌ಟಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಹರೀಶ್ ಕೊಲ್ಲಂಗಾನ, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀಧರ ಕೂಡ್ಲು, ಕಾಸರಗೋಡು ಮಂಡಲ ಉಪಾಧ್ಯಕ್ಷ ರಮೇಶ್ ವಿವೇಕಾನಂದನಗರ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಗೋಪಾಲಕೃಷ್ಣನ್, ಬ್ಲಾಕ್ ಪಂಚಾಯತ್ ಸದಸ್ಯೆ ಲೀಲಾ, ಪಂಚಾಯತ್ ಸದಸ್ಯರಾದ ನವನೀತ್ ರೈ, ಚಂದ್ರ ಬಿ., ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಸುರೇಶ್ ಕಾಳಿಯಂಗಾಡ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

SHARE
Loading spinner

Leave a Reply

Your email address will not be published. Required fields are marked *

error: Content is protected !!