ಕಾಸರಗೋಡು: ಕೊಡಗು ಜಿಲ್ಲೆಯ ಶಿಕ್ಷಣ ಕ್ಷೇತ್ರದ ಗಣನೀಯ ಸೇವೆಗಾಗಿ ಶ್ರೀಮತಿ ಕಾಳೆಂಗಡ ದಮಯಂತಿ ತಿಮ್ಮಯ್ಯ ಅವರಿಗೆ ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ಅಂತಾರಾಜ್ಯ ಮಟ್ಟದ ‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಪ್ರಶಸ್ತಿ’ (Teachers Achievement Award) ನೀಡಿ ಗೌರವಿಸಲಾಗುತ್ತಿದೆ.
ಜುಲೈ 26ರಂದು ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಸಮಾರಂಭದ ಅಂಗವಾಗಿ ನಡೆಯಲಿರುವ **‘ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
ಸಮ್ಮೇಳನವು ಮಾಜಿ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ನೀಡಿರುವ ಕೊಡುಗೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಪರಿಗಣಿಸಿ ಶ್ರೀಮತಿ ದಮಯಂತಿ ತಿಮ್ಮಯ್ಯ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.