ಬೆಂಗಳೂರು: ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ನಡೆದ ಅಖಿಲ ಕರ್ನಾಟಕ ಶಿಕ್ಷಕರ ಸಮ್ಮೇಳನದಲ್ಲಿ ಗಡಿನಾಡು ಕಾಸರಗೋಡಿನ ಕನ್ನಡ ಭವನದ ಖ್ಯಾತಿಯ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂದ್ಯಾರಾಣಿ ಟೀಚರ್ ದಂಪತಿಗಳಿಗೆ “ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ” ಪ್ರದಾನ ಮಾಡಿ ಗೌರವಿಸಲಾಯಿತು.
ಆರ್ಯಭಟ ಚಾರಿಟೇಬಲ್ ಟ್ರಸ್ಟ್, ಬೆಳಗಾವಿ (ಮುಂಬೈ ಪ್ರಾಂತ್ಯ) ಹಾಗೂ ಚೇತನ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ನಡೆದ ಸಮಾರಂಭದಲ್ಲಿ, ಶಿಕ್ಷಣ, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ನೀಡಿದ ಅಮೂಲ್ಯ ಸೇವೆಯನ್ನು ಪರಿಗಣಿಸಿ “ಆದರ್ಶ ಕನ್ನಡ ದಂಪತಿಗಳು” ವಿಭಾಗದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಚಂದ್ರಶೇಖರ ಮಾಡಲಗೇರಿ, ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಅಸೋಸಿಯೇಟ್ ಪ್ರೊಫೆಸರ್ ಡಾ. ಬಾಲಕೃಷ್ಣ ಎಸ್. ಮದ್ದೋಡಿ ಸೇರಿದಂತೆ ಶಿಕ್ಷಣ, ಸಾಹಿತ್ಯ ಹಾಗೂ ವಿವಿಧ ಕ್ಷೇತ್ರಗಳ ಅನೇಕ ಗಣ್ಯರು ಉಪಸ್ಥಿತರಿದ್ದು, ಪ್ರಶಸ್ತಿ ಪುರಸ್ಕೃತ ದಂಪತಿಗಳನ್ನು ಅಭಿನಂದಿಸಿದರು.