ಮಂಜೇಶ್ವರ: ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ, ಭಾನುವಾರ ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪೋಲಿಯೋ ಲಸಿಕಾ ಅಭಿಯಾನವು ಅತ್ಯಂತ ಉತ್ಸಾಹ ಮತ್ತು ಸಡಗರದಿಂದ ನಡೆಯಿತು. ಈ ಅಭಿಯಾನದಲ್ಲಿ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕೈಜೋಡಿಸಿ ಯಶಸ್ವಿಗೊಳಿಸಿದರು.

ಮಂಜೇಶ್ವರ ಸರಕಾರಿ ಆಸ್ಪತ್ರೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಶೀರ್ ಕನಿಲ ಅವರು ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳ ಆರೋಗ್ಯ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪೋಲಿಯೋ ಮುಕ್ತ ದೇಶವನ್ನಾಗಿ ಮಾಡುವಲ್ಲಿ ಪ್ರತಿಯೊಬ್ಬ ಪೋಷಕರು ಜಾಗೃತರಾಗಬೇಕು ಎಂದು ಕರೆ ನೀಡಿದರು.

ಗ್ರಾಮ ಪಂಚಾಯತ್ನ ವಿವಿಧ ಭಾಗಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿತ್ತು. ಜಿ.ಎಚ್.ಎಸ್ ಅಂಗನವಾಡಿ, ಉದ್ಯಾವರ ಅಂಗನವಾಡಿ ಮತ್ತು ತಲಪಾಡಿ ಬಸ್ ನಿಲ್ದಾಣದಲ್ಲಿ ನಡೆದ ಲಸಿಕಾ ಕಾರ್ಯಕ್ರಮಗಳಿಗೆ ಗ್ರಾಮ ಪಂಚಾಯತ್ ಸದಸ್ಯರಾದ ಮುಕ್ತಾರ್ ಎ. ಮತ್ತು ಇಲ್ಯಾಸ್ ತೂಮಿನಾಡು, ಸ್ಥಾಯೀ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಹಾಜಿ ಕೆ ಎಂ ಕೆ,
ಫರಾನ, ಝರೀನಾ ಅವರು ನೇತೃತ್ವ ವಹಿಸಿ, ಕಾರ್ಯಕ್ರಮದ ಮೇಲ್ವಿಚಾರಣೆ ನಡೆಸಿದರು.


ಲಸಿಕಾ ಅಭಿಯಾನವು ಸುಗಮವಾಗಿ ನಡೆಯಲು ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮುಂಜಾನೆಯಿಂದಲೇ ಸಕ್ರಿಯವಾಗಿ ಕಾರ್ಯನಿರ್ವಹಿಸಿದರು.
ತಮ್ಮ ಮನೆ ಬಾಗಿಲಿಗೆ ಬಂದ ಲಸಿಕಾ ತಂಡಗಳಿಗೆ ಸಾರ್ವಜನಿಕರು ಹಾಗೂ ಪೋಷಕರು ಸಹಕಾರ ನೀಡಿದರು. ಒಟ್ಟಾರೆಯಾಗಿ, ಮಂಜೇಶ್ವರದಲ್ಲಿ ನಡೆದ ಈ ಅಭಿಯಾನವು ಜನಸಾಮಾನ್ಯರ ಆರೋಗ್ಯದ ಬಗೆಗಿನ ಜಾಗೃತಿಯನ್ನು ಎತ್ತಿ ತೋರಿಸಿತು


