ವಿಟ್ಲ ಎಸ್ಐ ಅರ್ಜಿ ಆಧಾರದಲ್ಲಿ ಎಸ್ಪಿಯಿಂದ ಕಾರಣ ಕೇಳಿ ನೋಟಿಸ್; ರಾಜಕೀಯ ವಾಗ್ವಾದ ತೀವ್ರ
ಬಂಟ್ವಾಳ, ಜು. 2: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಹಿಂದೂ ಸಂಘಟನೆ ಕಾರ್ಯಕರ್ತ ಯತೀಶ್ ಪೆರುವಾಯಿ ಅವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಡಿಪಾರು (ಡಿಪೋರ್ಟ್) ಕುರಿತು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.
ವಿಟ್ಲ ಸಬ್ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ಅವರು ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ಜಿಲ್ಲಾ ಎಸ್ಪಿ ಅರುಣ್ ಕೆ. ಈ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನೋಟಿಸ್ಗೆ ಉತ್ತರ ನೀಡುವಂತೆ ಯತೀಶ್ ಪೆರುವಾಯಿಗೆ ಸೂಚನೆ ನೀಡಲಾಗಿದೆ.


ಈ ಕ್ರಮವನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆಯ ಎಚ್ಚರಿಕೆ ನೀಡಿದೆ. ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆಯ ವಿರುದ್ಧ ಭ್ರಷ್ಟಾಚಾರ ಆರೋಪದ ದೂರು ನೀಡಿದ್ದ ಹಿನ್ನೆಲೆಯಲ್ಲಿ ಯತೀಶ್ ವಿರುದ್ಧ ದ್ವೇಷಪೂರ್ವಕವಾಗಿ ಗಡಿಪಾರು ನೋಟಿಸ್ ಜಾರಿಯಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಗಡಿಪಾರು ಆದೇಶವನ್ನು ಹಿಂಪಡೆಯದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಮುಖಂಡರು ಎಚ್ಚರಿಸಿದ್ದಾರೆ. ಘಟನೆ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ವಿಷಯ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.


