ಬೆಂಗಳೂರು: ‘ತೂಗುಸೇತುವೆಗಳ ಸರದಾರ’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ. ಗಿರೀಶ್ ಭಾರದ್ವಾಜ್ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ತಮ್ಮ ಅಪಾರ ತಾಂತ್ರಿಕ ಜ್ಞಾನ ಮತ್ತು ಜನಪರ ಕಾಳಜಿಯಿಂದ ನೂರಾರು ತೂಗುಸೇತುವೆಗಳನ್ನು ನಿರ್ಮಿಸಿ, ಗ್ರಾಮೀಣ ಪ್ರದೇಶದ ಲಕ್ಷಾಂತರ ಜನರ ಬದುಕಿಗೆ ಆಸರೆಯಾಗಿದ್ದರು. ಅವರ ಸಾಧನೆ, ಸೇವಾ ಮನೋಭಾವ ಹಾಗೂ ಸರಳ ವ್ಯಕ್ತಿತ್ವ ಸದಾ ಸ್ಮರಣೀಯವಾಗಿರಲಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಕನ್ನಡ ನಾಡಿನ ಈ ಹೆಮ್ಮೆಯ ಸಾಧಕ ದೇಶ-ವಿದೇಶಗಳಲ್ಲಿ ಹೆಸರು ಮಾಡಿದ್ದು, ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ ಎಂದು ಅವರು ಹೇಳಿದ್ದಾರೆ.
ಡಾ. ಗಿರೀಶ್ ಭಾರದ್ವಾಜ್ ಅವರ ಆತ್ಮಕ್ಕೆ ದೇವರು ಸದ್ಗತಿಯನ್ನು ಕರುಣಿಸಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದೇವರು ನೀಡಲಿ ಎಂದು ವಿಜಯೇಂದ್ರ ಪ್ರಾರ್ಥಿಸಿದ್ದಾರೆ.


