ಕಡಬ, ಜು. 6: ಕಡಬ ತಾಲೂಕು ಎಡಮಂಗಲ ಗ್ರಾಮದ ಕರಿಂಬಿಲ ಪೂರ್ಣಚಂದ್ರ ಹಾಗೂ ಕವಿತಾ ದಂಪತಿಯ ಪುತ್ರ, ಎಣ್ಣೂರು ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಶಿಶಿಲ್ (14) ಹೃದಯಾಘಾತದಿಂದ ಭಾನುವಾರ ರಾತ್ರಿ ನಿಧನರಾದರು.
ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಶಿಶಿಲ್ ಅವರಿಗೆ ಕಾಣಿಯೂರು, ಪುತ್ತೂರು ಹಾಗೂ ಮಂಗಳೂರಿನ ಕೆಎಂಸಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲು ಸೋಮವಾರ ಕರೆದೊಯ್ಯಲು ಕುಟುಂಬಸ್ಥರು ನಿರ್ಧರಿಸಿದ್ದರು. ಆದರೆ ಭಾನುವಾರ ರಾತ್ರಿ ಆರೋಗ್ಯ ಏಕಾಏಕಿ ಹದಗೆಟ್ಟ ಹಿನ್ನೆಲೆಯಲ್ಲಿ ಪುತ್ತೂರಿಗೆ ಚಿಕಿತ್ಸೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಶಿಶಿಲ್ ಯಕ್ಷಗಾನ ಹಾಗೂ ನಾಟಕ ಕಲಾವಿದನಾಗಿಯೂ ಗುರುತಿಸಿಕೊಂಡಿದ್ದರು. .
ಮೃತರು ತಂದೆ ಪೂರ್ಣಚಂದ್ರ, ತಾಯಿ ಕವಿತಾ, ಸಹೋದರ ಗಾಯನ್ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.


