ಕೊಪ್ಪಳ/ಕಾಸರಗೋಡು: ಕೊಪ್ಪಳ ಜಿಲ್ಲೆಯ ಖ್ಯಾತ ಜಾನಪದ ಗಾಯಕಿ ಲಲಿತಮ್ಮ ಬಿ. ಹಿರೇಮಠ (ಕುಷ್ಟಗಿ) ಅವರಿಗೆ ಗಡಿನಾಡು ಕಾಸರಗೋಡಿನ ಪ್ರತಿಷ್ಠಿತ ಕನ್ನಡ ಸಂಸ್ಥೆಯಾದ ಕನ್ನಡ ಭವನ ನೀಡುವ “ಕನ್ನಡ ಪಯಸ್ವಿನಿ ಜಾನಪದ ರತ್ನ ಅಚೀವ್ಮೆಂಟ್ ಅವಾರ್ಡ್–2026”ಕ್ಕೆ ಆಯ್ಕೆ ಮಾಡಲಾಗಿದೆ.
ಜಾನಪದ ಸಂಗೀತ ಕ್ಷೇತ್ರದಲ್ಲಿ ಲಲಿತಮ್ಮ ಬಿ. ಹಿರೇಮಠ ಅವರು ಸಲ್ಲಿಸಿರುವ ವಿಶಿಷ್ಟ ಸೇವೆ ಹಾಗೂ ಕಲಾ ಸಾಧನೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.

ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ
ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯಲಿರುವ “ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ” ಹಾಗೂ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ”ದ ಸಂದರ್ಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
ಈ ಕುರಿತು ಪ್ರಕಟಣೆ ನೀಡಿರುವ ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್, ಜಾನಪದ ಕಲಾ ಕ್ಷೇತ್ರಕ್ಕೆ ಲಲಿತಮ್ಮ ಬಿ. ಹಿರೇಮಠ ಅವರು ನೀಡಿರುವ ಅಮೂಲ್ಯ ಕೊಡುಗೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


