ಕೊಂಕಣ ರೈಲ್ವೆ ಭಾರತೀಯ ರೈಲ್ವೆಗೆ ವಿಲೀನಕ್ಕೆ ಶೀಘ್ರ ಕ್ರಮ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಂಡರೆ ಮಾತ್ರ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ದೊರೆಯಲಿದ್ದು, ಈ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿಯ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಕೊಂಕಣ ರೈಲ್ವೆ ವತಿಯಿಂದ ಸುಮಾರು ₹2.26 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಲಿಫ್ಟ್‌ನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.


ಕೊಂಕಣ ರೈಲ್ವೆಯಲ್ಲಿ ಕರ್ನಾಟಕ, ಕೇರಳ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳು ಪಾಲುದಾರರಾಗಿವೆ. ಕೇರಳ ಮತ್ತು ಗೋವಾ ಸರ್ಕಾರಗಳು ತಮ್ಮ ಪಾಲಿನ ಷೇರುಗಳನ್ನು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿವೆ. ಕರ್ನಾಟಕದಲ್ಲಿ ಈ ಪ್ರಕ್ರಿಯೆ ಸ್ವಲ್ಪ ವಿಳಂಬವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಮಾತನಾಡಿದ್ದು, ಅವರು ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಹಾಗೆಯೇ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರೊಂದಿಗೂ ಚರ್ಚೆ ನಡೆಸಲಾಗಿದ್ದು, ರಾಜ್ಯದ ಪಾಲಿನ ಷೇರುಗಳನ್ನು ಶೀಘ್ರವೇ ಕೇಂದ್ರಕ್ಕೆ ಹಸ್ತಾಂತರಿಸುವ ವಿಶ್ವಾಸವಿದೆ ಎಂದು ತಿಳಿಸಿದರು.

ಕೊಂಕಣ ರೈಲ್ವೆ ವಿಲೀನ ಪ್ರಕ್ರಿಯೆಗೆ ಮಹಾರಾಷ್ಟ್ರ ಸರ್ಕಾರದ ಒಪ್ಪಿಗೆ ಅಗತ್ಯವಾಗಿದ್ದು, ಆ ರಾಜ್ಯದ ಸಹಮತ ಪಡೆಯಲು ಪ್ರಯತ್ನಿಸಲಾಗುವುದು ಎಂದರು.
ಬೆಂಗಳೂರು–ಕಾರವಾರ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದು ತಮ್ಮ ಪ್ರಮುಖ ಬೇಡಿಕೆಯಾಗಿದ್ದು, ಈ ಕುರಿತು ಪ್ರಯೋಗಿಕ ಸಮೀಕ್ಷೆ ನಡೆಯುತ್ತಿದೆ. ಶೀಘ್ರದಲ್ಲೇ ಈ ಭಾಗಕ್ಕೂ ವಂದೇ ಭಾರತ್ ರೈಲು ಸೇವೆ ದೊರೆಯುವ ವಿಶ್ವಾಸವಿದೆ ಎಂದು ಹೇಳಿದರು.


ಬಾರ್ಕೂರು ರೈಲ್ವೆ ನಿಲ್ದಾಣದ ಸಮಗ್ರ ಅಭಿವೃದ್ಧಿಗಾಗಿ ₹14.50 ಕೋಟಿ ಮೊತ್ತದ ಪ್ರಸ್ತಾವನೆ ಸಲ್ಲಿಸಲಾಗಿದೆ. ಎರಡು ತಿಂಗಳೊಳಗೆ ಅನುದಾನ ಮಂಜೂರಾದರೆ ಶೆಲ್ಟರ್ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳ ಕಾಮಗಾರಿ ಆರಂಭಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!