ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ ಅವರು ಶನಿವಾರ ಮಂಗಳೂರು ನಗರದ ಪಂಪ್ವೆಲ್ನಲ್ಲಿರುವ ಆಧಾರ್ ಸೇವಾ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ, ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು.ಟೋಕನ್ ಪಡೆಯಲು ಸರದಿಯಲ್ಲಿ ನಿಂತಿದ್ದ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದ ಅವರು, ಸೇವಾ ಕೇಂದ್ರದಲ್ಲಿ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಅಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು.

ಬಳಿಕ ಕೇಂದ್ರದ ಸೆಂಟ್ರಲ್ ಮ್ಯಾನೇಜರ್ ರಾಘವೇಂದ್ರ ಅವರನ್ನು ಭೇಟಿ ಮಾಡಿದ ಐವನ್ ಡಿ’ಸೋಜಾ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸುಗಮ, ಶೀಘ್ರ ಹಾಗೂ ವ್ಯವಸ್ಥಿತ ಸೇವೆ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಸಾರ್ವಜನಿಕರು ಹೆಚ್ಚಿನ ಸಮಯ ಕಾಯಬೇಕಾಗದಂತೆ ಸೇವಾ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸುವ ಅಗತ್ಯವಿದ್ದು, ಜನಸ್ನೇಹಿ ಸೇವೆಗೆ ಆದ್ಯತೆ ನೀಡಬೇಕೆಂದು ಅವರು ಅಧಿಕಾರಿಗಳಿಗೆ ತಿಳಿಸಿದರು


