ಮಂಗಳೂರು, ಜು. 18: ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ, ರಂಗಕರ್ಮಿ ಹಾಗೂ ತುಳು ಸಂಸ್ಕೃತಿಯ ಅಧ್ಯಯನಕಾರ ಪರಮಾನಂದ ಸಾಲ್ಯಾನ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, ಪರಮಾನಂದ ಸಾಲ್ಯಾನ್ ಅವರು ಪತ್ರಿಕೋದ್ಯಮದ ಜೊತೆಗೆ ತುಳು ರಂಗಭೂಮಿ, ಜಾನಪದ ಹಾಗೂ ಭೂತಾರಾಧನೆಯ ಕುರಿತು ಅಪಾರ ಜ್ಞಾನ ಹೊಂದಿದ್ದ ವ್ಯಕ್ತಿಯಾಗಿದ್ದರು. ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದ ಅವರು ಕಿರಿಯ ಪತ್ರಕರ್ತರಿಗೆ ಮಾರ್ಗದರ್ಶನ ನೀಡುವಲ್ಲಿ ಸದಾ ಮುಂಚೂಣಿಯಲ್ಲಿದ್ದರು ಎಂದು ಸ್ಮರಿಸಿದರು.

ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಮಾತನಾಡಿ, ಪರಮಾನಂದ ಸಾಲ್ಯಾನ್ ಅವರು ಬಹುಮುಖ ಪ್ರತಿಭೆಯ ವ್ಯಕ್ತಿತ್ವವಾಗಿದ್ದು, ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುವ ಗುಣ ಹೊಂದಿದ್ದರು. ತುಳು ಭಾಷೆಯ ಮೇಲಿನ ಅವರ ಪಾಂಡಿತ್ಯ ಹಾಗೂ ಭಾಷಾ ಶುದ್ಧತೆ ಯುವ ಪತ್ರಕರ್ತರಿಗೆ ಆದರ್ಶವಾಗಿತ್ತು ಎಂದು ಹೇಳಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಮಾಜಿ ಅಧ್ಯಕ್ಷ ಜಗನ್ನಾಥ್ ಶೆಟ್ಟಿ ಬಾಳ, ಭಾಸ್ಕರ ರೈ ಕಟ್ಟ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ ನುಡಿನಮನ ಸಲ್ಲಿಸಿದರು. ಸಂಘದ ಪದಾಧಿಕಾರಿಗಳಾದ ವಿಲ್ಫ್ರೆಡ್ ಡಿಸೋಜ, ರಾಜೇಶ್ ಶೆಟ್ಟಿ ಹಾಗೂ ರಾಜೇಶ್ ದಡ್ಡಂಗಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

