ರಾಷ್ಟ್ರೀಯ ಭದ್ರತಾ ದಳ ತಂಡವು ದ.ಕ. ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಭಯೋತ್ಪಾದನಾ ನಿಗ್ರಹ ಅಣಕು ಕಾರ್ಯಾಚರಣೆ ನಡೆಸುತ್ತಿದ್ದು, ಇದರ ಭಾಗವಾಗಿ ಮಂಗಳೂರಿನ ವಿವಿಧ ಕಡೆ ಇಂದು ಹೆಲಿಕಾಪ್ಟರ್ ಹಾರಾಟ ನಡೆಸಿದೆ. ಇದು ನಾಗರಿಕರಲ್ಲಿ ಸಂಚಲನ ಮೂಡಿಸಿತು.

ಮಂಗಳೂರು ನಗರದ ವಿವಿಧ ಭಾಗಗಳಲ್ಲಿ ಇಂದು ಬೆಳಗ್ಗೆ ಆಕಾಶದಲ್ಲಿ ಕೆಳಮಟ್ಟದಲ್ಲಿ ಹೆಲಿಕಾಪ್ಟರ್ ಹಾರಾಟ ಕಂಡು ಗಾಬರಿಗೊಂಡ ಸಾರ್ವಜನಿಕ ಅನೇಕರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ ಘಟನೆಯೂ ನಡೆದಿದೆ. ಎನ್ ಎಸ್ ಜಿಯ ಕಾರ್ಯದಕ್ಷತೆ ಕುರಿತಂತೆ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ಅಣಕು ಕಾರ್ಯಾಚರಣೆಯ ಭಾಗವಾಗಿ ಈ ಹೆಲಿಕಾಪ್ಟರ್ ಹಾರಾಟ ನಡೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದು, ಸಾರ್ವಜನಿಕರು ಗಾಬರಿ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.


