ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಕೃತಕ ಬುದ್ಧಿಮತ್ತೆ (AI) ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ ‘ಶ್ರೀ ವಾಹನ್’ ಹಾಗೂ ಎಐ ರಿಸೆಪ್ಷನ್ ರೋಬೋಟ್ ‘ಶ್ರೀನಿಬೋಟ್’ ಅನ್ನು ಗುರುವಾರ ಮುಕ್ಕ ಕ್ಯಾಂಪಸ್ನಲ್ಲಿ ಯಶಸ್ವಿಯಾಗಿ ಪ್ರದರ್ಶಿಸಲಾಯಿತು.

ವಿಶ್ವವಿದ್ಯಾಲಯದ ಆರ್ಥಿಕ ಸಹಕಾರ ಹಾಗೂ ಅಧ್ಯಾಪಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಯೋಜನೆಗಳನ್ನು ಅಭಿವೃದ್ಧಿಪಡಿಸಿದ್ದು, ಸಂಶೋಧನೆ, ನವೋದ್ಯಮ ಮತ್ತು ತಂತ್ರಜ್ಞಾನಾಧಾರಿತ ಶಿಕ್ಷಣದತ್ತ ವಿಶ್ವವಿದ್ಯಾಲಯದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ.

‘ಶ್ರೀ ವಾಹನ್’ ಲಿಡಾರ್, ಎಐ ವಿಷನ್, ಜಿಪಿಎಸ್ ಮತ್ತು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನಗಳನ್ನು ಒಳಗೊಂಡ ಸ್ವಯಂಚಾಲಿತ ವಿದ್ಯುತ್ ವಾಹನವಾಗಿದೆ. ಆರು ಆಸನಗಳ ಸಾಮರ್ಥ್ಯ ಹೊಂದಿರುವ ಈ ವಾಹನವನ್ನು ಆಸ್ಪತ್ರೆ, ಕೈಗಾರಿಕೆ ಹಾಗೂ ರಕ್ಷಣಾ ಕ್ಷೇತ್ರದಲ್ಲಿ ಬಳಸುವ ಉದ್ದೇಶದಿಂದ ಅಭಿವೃದ್ಧಿಪಡಿಸಲಾಗಿದೆ.

‘ಶ್ರೀನಿಬೋಟ್’ ವಿಶ್ವವಿದ್ಯಾಲಯಕ್ಕೆ ಆಗಮಿಸುವ ವಿದ್ಯಾರ್ಥಿಗಳು, ಪೋಷಕರು ಹಾಗೂ ಅತಿಥಿಗಳನ್ನು ಸ್ವಾಗತಿಸಿ, ಧ್ವನಿ ಸಂವಾದದ ಮೂಲಕ ಮಾಹಿತಿ ನೀಡುವ ಎಐ ಆಧಾರಿತ ರಿಸೆಪ್ಷನ್ ರೋಬೋಟ್ ಆಗಿದೆ. ಮುಖ ಗುರುತಿಸುವಿಕೆ, ಟಚ್ ಡಿಸ್ಪ್ಲೇ, ಬಹುಭಾಷಾ ಸಂವಹನ ಸೇರಿದಂತೆ ಹಲವು ಸ್ಮಾರ್ಟ್ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಸಂಶೋಧನಾ ಯೋಜನೆಗಳ ಪ್ರದರ್ಶನ ಕಾರ್ಯಕ್ರಮದಲ್ಲಿ ಕುಲಾಧಿಪತಿ ಡಾ. ಎ. ಶ್ರೀನಿವಾಸ ರಾವ್, ಉಪಕುಲಪತಿ ಡಾ. ಸತ್ಯನಾರಾಯಣ ರೆಡ್ಡಿ, ಕುಲಸಚಿವ ಡಾ. ಅನಿಲ್ ಕುಮಾರ್ ಸೇರಿದಂತೆ ವಿಶ್ವವಿದ್ಯಾಲಯದ ಅಧಿಕಾರಿಗಳು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದರು.


