ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದಂತೆ ಉಚಿತ ವಿದ್ಯುತ್ ಸೌಲಭ್ಯ ಮುಂದುವರಿಯುವ ಉದ್ದೇಶದಿಂದ, ಕೊಳ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಹಾಗೂ ಬಂಟ್ವಾಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಪವಿತ್ರ ಪೂಂಜಾ ಅವರ ನೇತ್ರತ್ವದಲ್ಲಿ ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಹುತೇಕ ವಾರ್ಡ್ಗಳಲ್ಲಿ ಗೃಹಜ್ಯೋತಿ ಪುನರ್ಪರಿಶೀಲನೆ ಶಿಬಿರಗಳನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಈ ಶಿಬಿರಗಳಲ್ಲಿ ಭಾಗವಹಿಸಿದ ನೂರಾರು ಫಲಾನುಭವಿಗಳು ತಮ್ಮ ದಾಖಲೆಗಳ ಪರಿಶೀಲನೆ ಹಾಗೂ ಅಗತ್ಯ ತಿದ್ದುಪಡಿಗಳನ್ನು ಪೂರ್ಣಗೊಳಿಸಿಕೊಂಡು ಸರ್ಕಾರದ ಉಚಿತ ವಿದ್ಯುತ್ ಯೋಜನೆಯ ಪ್ರಯೋಜನವನ್ನು ನಿರಂತರವಾಗಿ ಪಡೆಯುವಂತಾಯಿತು.
ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಟ್ಲ, ಬಂಟ್ವಾಳ ಹಾಗೂ ಸಾಲೆತ್ತೂರು ಮೆಸ್ಕಾಂ ವಿಭಾಗಗಳ ವ್ಯಾಪ್ತಿ ಇರುವುದರಿಂದ, ಮೂರು ಕೇಂದ್ರಗಳ ಹಿರಿಯ ಮತ್ತು ಕಿರಿಯ ಅಭಿಯಂತರರೊಂದಿಗೆ ಸಮನ್ವಯ ಸಾಧಿಸಿ ಹಂತ ಹಂತವಾಗಿ ಶಿಬಿರಗಳನ್ನು ಆಯೋಜಿಸಲಾಯಿತು.

ಈಗಾಗಲೇ ಮಾದಕಟ್ಟೆ–ಮದಕ, ಕುಡ್ತಮುಗೇರು, ಕುಳಾಲು, ಸಾಲೆತ್ತೂರು, ತಾಳಿತ್ತನೂಜಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಶಿಬಿರಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಉಳಿದ ಪ್ರದೇಶಗಳಿಗೂ ದಿನಾಂಕ ನಿಗದಿಪಡಿಸಲಾಗಿದೆ. ಈ ತಿಂಗಳೊಳಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಹುತೇಕ ಎಲ್ಲಾ ವಾರ್ಡ್ಗಳಲ್ಲಿ ಪುನರ್ಪರಿಶೀಲನೆ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆಯಿದೆ.
ಜನಸಾಮಾನ್ಯರಿಗೆ ಸರ್ಕಾರದ ಯೋಜನೆಗಳು ಸುಲಭವಾಗಿ ತಲುಪುವಂತೆ ಜನಪ್ರತಿನಿಧಿಗಳು, ಮೆಸ್ಕಾಂ ಅಧಿಕಾರಿಗಳು ಹಾಗೂ ಸ್ಥಳೀಯ ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿರುವುದು ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ.

