ಉಡುಪಿ: ಶಾಸಕ ಯಶ್ಪಾಲ್ ಸುವರ್ಣ ಅವರು ರಾಹುಲ್ ಗಾಂಧಿ ಕುರಿತು ನೀಡಿದ ಹೇಳಿಕೆಯನ್ನು ವಿರೋಧಿಸಿ ಶಾಸಕರ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಗುರುವಾರ ನಗರದ ಜೋಡುಕಟ್ಟೆ ಬಳಿ ವಶಕ್ಕೆ ಪಡೆದರು.


ದ್ವೇಷ ಭಾಷಣವನ್ನು ಖಂಡಿಸಿ ಶಾಸಕ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಯುವ ಕಾಂಗ್ರೆಸ್ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ನಗರದ ಜೋಡುಕಟ್ಟೆ ಹಾಗೂ ಶಾಸಕ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಮುತ್ತಿಗೆಯ ಮಾಹಿತಿ ತಿಳಿದ ಬಿಜೆಪಿ ಕಾರ್ಯಕರ್ತರು ಶಾಸಕ ಕಚೇರಿ ಹಾಗೂ ನಿವಾಸದ ಬಳಿ ಜಮಾಯಿಸಿದ್ದರಿಂದ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳಕ್ಕೆ ಆಗಮಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಬಳಿಕ ಕಾಂಗ್ರೆಸ್ ಮುಖಂಡರ ಸೂಚನೆ ಮೇರೆಗೆ ಕಚೇರಿಗೆ ಮುತ್ತಿಗೆ ಹಾಕುವ ನಿರ್ಧಾರದಿಂದ ಹಿಂದೆ ಸರಿದರು. ಆದರೆ ಘೋಷಣೆಗಳನ್ನು ಕೂಗುತ್ತಾ ಶಾಸಕ ಕಚೇರಿಯತ್ತ ಮುನ್ನಡೆಯುತ್ತಿದ್ದ ವೇಳೆ ಪೊಲೀಸರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ಪರಿಸ್ಥಿತಿಯನ್ನು ನಿಯಂತ್ರಿಸಿದರು



