ಕುಂದಾಪುರದಲ್ಲಿ ಉದ್ಯಮಿ ಗುಂಡಿಕ್ಕಿ ಹತ್ಯೆ: ಹಣಕಾಸಿನ ವ್ಯವಹಾರವೇ ಕಾರಣ?

ಆರೋಪಿ ಪತ್ತೆಗಾಗಿ ಮೂರು ವಿಶೇಷ ತಂಡ ರಚನೆ

ಉಡುಪಿ: ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ವ್ಯವಹಾರ ಹಾಗೂ ಇತರ ವ್ಯವಹಾರಗಳಲ್ಲಿನ ಮನಸ್ತಾಪವೇ ಪ್ರಮುಖ ಕಾರಣ ಎಂಬುದು ಪೊಲೀಸ್ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.


ಪೊಲೀಸರ ಮಾಹಿತಿ ಪ್ರಕಾರ, ಜುಲೈ 30ರಂದು ರಾತ್ರಿ ಸುಮಾರು 11.45ಕ್ಕೆ ಆರೋಪಿ ಡೆರಿಕ್ ಕ್ರಾಸ್ತಾ ಅವರು ಐವನ್ ಅವರಿಗೆ ಕರೆ ಮಾಡಿ ಹಣಕಾಸಿನ ವ್ಯವಹಾರದ ಕುರಿತು ಮಾತುಕತೆ ನಡೆಸಿದ್ದರು. ಬಾಕಿ ಹಣವನ್ನು ಮಧ್ಯಸ್ಥಿಕೆ ವಹಿಸಿ ಕೊಡಿಸುವುದಾಗಿ ಹೇಳಿದ್ದರೂ, ಇಬ್ಬರ ನಡುವೆ ವಾಗ್ವಾದ ನಡೆದಿದೆ. ಇದೇ ವೇಳೆ, “ದಮ್ ಇದ್ದರೆ ಒಬ್ಬನೇ ಕುಂದಾಪುರಕ್ಕೆ ಬಾ” ಎಂದು ಡೆರಿಕ್ ಸವಾಲು ಹಾಕಿದ್ದ ಎನ್ನಲಾಗಿದೆ.


ಬಳಿಕ ಜುಲೈ 31ರ ನಸುಕಿನ ಸುಮಾರು 1.30ಕ್ಕೆ ಡೆರಿಕ್ ಸ್ಥಳದ ಲೊಕೇಶನ್ ಅನ್ನು ಐವನ್ ಅವರಿಗೆ ಕಳುಹಿಸಿದ್ದಾನೆ. ಅದರಂತೆ ಐವನ್ ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರಿನ ಕಾಂಕ್ರೀಟ್ ರಸ್ತೆಯಲ್ಲಿ ಕಾರು ನಿಲ್ಲಿಸಿಕೊಂಡಿದ್ದರು.


ಸುಮಾರು 3.15ರ ವೇಳೆಗೆ ಕಪ್ಪು-ಕೆಂಪು ಬಣ್ಣದ ಥಾರ್ ವಾಹನದಲ್ಲಿ ಅಲ್ಲಿಗೆ ಬಂದ ಡೆರಿಕ್, ಐವನ್ ಅವರ ಕಾರಿನ ಎದುರು ವಾಹನ ನಿಲ್ಲಿಸಿ ಕೆಳಗಿಳಿದಿದ್ದಾನೆ. ಐವನ್ ಕಾರಿನಿಂದ ಇಳಿದ ತಕ್ಷಣ ತನ್ನ ಬಳಿ ಇದ್ದ ಪಿಸ್ತೂಲಿನಿಂದ ಸೊಂಟದ ಕೆಳಭಾಗಕ್ಕೆ ಗುಂಡು ಹಾರಿಸಿ, ಬಳಿಕ ವಾಹನದಲ್ಲಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.


ಗುಂಡೇಟಿನಿಂದ ಸೊಂಟ ಹಾಗೂ ಕಾಲಿಗೆ ಗಂಭೀರ ಗಾಯಗೊಂಡ ಐವನ್ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಡೆರಿಕ್ ಕ್ರಾಸ್ತಾ ಬಂಧನಕ್ಕಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!