ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಮಳೆಯ ಅಬ್ಬರ ಜೋರಾಗಿದೆ. ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಗಡಿಯಾರ ಜೋಗಿಬೆಟ್ಟು ರಸ್ತೆಯಲ್ಲಿ ಭಾರೀ ಮಳೆಯಿಂದಾಗಿ ನೀರು ನಿಂತು ವಿದ್ಯಾರ್ಥಿಗಳಿಗೆ, ವಾಹನ ಸವಾರರು ಹಾಗೂ ಸ್ಥಳೀಯರ ಸಂಚಾರಕ್ಕೆ ತೊಂದರೆಯಾಗಿದೆ.


ಇತ್ತೀಚಿಗೆ ಇಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಮಾಡಿದ್ದರೂ ಸೂಕ್ತ ಚರಂಡಿ ವ್ಯವಸ್ಥೆ ಮಾಡದೇ ಇರುವುದರಿಂದ್ದ ಪದೇ ಪದೇ ಮಳೆ ಬರುತ್ತಿರುವ ಪರಿಣಾಮ ಮಳೆ ನೀರು ರಸ್ತೆಯಲ್ಲೇ ನಿಂತು ಕೃತಕ ನೆರೆ ಸೃಷ್ಟಿಯಾಗಿದೆ. ಜೋಗಿಬೆಟ್ಟು ರಸ್ತೆಯು ಪಾಟ್ರಕೋಡಿ, ಮಿತ್ತೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು ಇಲ್ಲಿ ಅನೇಕ ಮನೆಗಳಿವೆ, ಅಂಗಡಿಗಳಿವೆ. ಹೀಗಾಗಿ ನೀರು ನಿಂತು ಜನರ ಓಡಾಟಕ್ಕೆ ತೊಂದರೆಯಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಹರಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ.


