ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಆಯೋಜಿಸಲಾಗುವ ‘ಅಖಂಡ ಭಾರತ ಸಂಕಲ್ಪ ದಿನ’ವನ್ನು ಸಂಪೂರ್ಣವಾಗಿ ದೇಶಭಕ್ತಿಯ ಸದ್ಭಾವನೆಯ ಕಾರ್ಯಕ್ರಮ ಎಂದು ವಿಹಿಂಪ ಹೇಳಿದೆ. ಭಾರತದ ವಿಭಜನೆಯ ಕರಾಳ ಇತಿಹಾಸವನ್ನು ಸ್ಮರಿಸುವುದರ ಜೊತೆಗೆ, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾಪುರುಷರು ಹಾಗೂ ಕ್ರಾಂತಿಕಾರಿಗಳನ್ನು ಸ್ಮರಿಸುವ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದೆ.

ಯುವಜನತೆಯಲ್ಲಿ ರಾಷ್ಟ್ರಪ್ರೇಮವನ್ನು ಜಾಗೃತಗೊಳಿಸುವ ಉದ್ದೇಶವಿರುವ ಈ ಕಾರ್ಯಕ್ರಮದಲ್ಲಿ ಯಾವುದೇ ಕೋಮುದ್ವೇಷದ ಹೇಳಿಕೆಗಳು ಅಥವಾ ಕೋಮು ಪ್ರಚೋದನೆಗೆ ಸಂಬಂಧಿಸಿದ ಅಂಶಗಳಿಲ್ಲ ಎಂದು ವಿಹಿಂಪ ಪ್ರತಿಪಾದಿಸಿದೆ.
ಆದರೆ, ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶ್ರೀ ಪುನೀತ್ ಅತ್ತಾವರ ಅವರಿಗೆ ಉಡುಪಿ ಜಿಲ್ಲೆಗೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿರುವುದನ್ನು ವಿಹಿಂಪ ತೀವ್ರವಾಗಿ ವಿರೋಧಿಸಿದೆ. ಸಂಪೂರ್ಣ ಸತ್ಯಾಸತ್ಯತೆಗಳನ್ನು ಪರಿಶೀಲಿಸದೆ ಏಕಪಕ್ಷೀಯವಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿರುವ ಸಂಘಟನೆ, ಈ ಕ್ರಮವನ್ನು ಪ್ರಜಾಪ್ರಭುತ್ವ ವಿರೋಧಿ ನಡವಳಿಕೆ ಎಂದು ಟೀಕಿಸಿದೆ.

ಜಿಲ್ಲಾಡಳಿತದ ಕ್ರಮವನ್ನು ಬಲವಾಗಿ ಖಂಡಿಸಿರುವ ವಿಶ್ವ ಹಿಂದೂ ಪರಿಷತ್, ಶ್ರೀ ಪುನೀತ್ ಅತ್ತಾವರ ಅವರ ಮೇಲಿನ ನಿರ್ಬಂಧವನ್ನು ತಕ್ಷಣವೇ ಹಿಂಪಡೆಯುವಂತೆ ಆಗ್ರಹಿಸಿದೆ.

