ಮಂಗಳೂರು: ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲಾ ಸಮಿತಿ ವತಿಯಿಂದ ಅವಧಿ ಹಾಗೂ ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಬ್ರಹ್ಮಕೊಟ್ಲು ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಆಗಸ್ಟ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ಡಿಸಿ ಕಚೇರಿ ಚಲೋ ಹಾಗೂ ಬೃಹತ್ ಪಾದಯಾತ್ರೆಗೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ದ.ಕನ್ನಡ ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ರಹಿಮಾನ್ ಬೋಳಿಯಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟೋಲ್ ಗೇಟ್ನಿಂದ ಸಾರ್ವಜನಿಕರು, ವಾಹನ ಚಾಲಕರು ಹಾಗೂ ಕಾರ್ಮಿಕರು ಎದುರಿಸುತ್ತಿರುವ ಅನಗತ್ಯ ಆರ್ಥಿಕ ಹೊರೆಯನ್ನು ನಿವಾರಿಸುವುದು ಅಗತ್ಯವಾಗಿದೆ. ನಿಯಮಬಾಹಿರವಾಗಿ ಅಥವಾ ನಿಗದಿತ ಅವಧಿ ಮೀರಿ ಯಾವುದೇ ಟೋಲ್ ಸಂಗ್ರಹ ನಡೆಯುತ್ತಿದ್ದರೆ ಅದನ್ನು ತಕ್ಷಣವೇ ಪರಿಶೀಲಿಸಿ, ಸಾರ್ವಜನಿಕ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿಯಾಗಿದೆ.

ಈ ಹಿನ್ನೆಲೆಯಲ್ಲಿ ಬ್ರಹ್ಮಕೊಟ್ಲು ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ನಡೆಯುವ ಹೋರಾಟಕ್ಕೆ SDTU ಸಂಪೂರ್ಣ ಬೆಂಬಲ ನೀಡುತ್ತಿದ್ದು, ಸಾರ್ವಜನಿಕರು ಮತ್ತು ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

