ಮಂಗಳೂರು: ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ನೇತೃತ್ವದಲ್ಲಿ ಮಂಗಳೂರಿನ ರಾಜಾಜಿ ಪಾರ್ಕ್ನಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.

ರಾಷ್ಟ್ರೀಯ ಕನಿಷ್ಠ ಮಾಸಿಕ ವೇತನವನ್ನು ₹30 ಸಾವಿರಕ್ಕೆ ನಿಗದಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಇಎಸ್ಐಸಿ ವೇತನ ಮಿತಿಯನ್ನು ₹21 ಸಾವಿರದಿಂದ ₹42 ಸಾವಿರಕ್ಕೆ ಹಾಗೂ ಇಪಿಎಫ್ ವೇತನ ಮಿತಿಯನ್ನು ₹15 ಸಾವಿರದಿಂದ ₹30 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಇಎಸ್ಐ ಆಸ್ಪತ್ರೆಗಳ ಮೂಲಸೌಕರ್ಯ ಹಾಗೂ ವೈದ್ಯಕೀಯ ಸೇವೆಗಳನ್ನು ತಕ್ಷಣ ಬಲಪಡಿಸಬೇಕು. ಇಪಿಎಸ್-95 ಯೋಜನೆಯಡಿ ಕನಿಷ್ಠ ಪಿಂಚಣಿಯನ್ನು ₹7,500ಕ್ಕೆ ಹೆಚ್ಚಿಸಿ, ತುಟ್ಟಿಭತ್ಯೆ ಮತ್ತು ಸಮಗ್ರ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಿಬ್ಬಂದಿ, ಅಕ್ಷರ ದಾಸೋಹ ಹಾಗೂ ಎನ್ಎಚ್ಎಂ ಸಿಬ್ಬಂದಿ ಸೇರಿದಂತೆ ವಿವಿಧ ವರ್ಗದ ನೌಕರರ ಗೌರವಧನ ಹೆಚ್ಚಿಸಿ, ಸಾಮಾಜಿಕ ಹಾಗೂ ನಿವೃತ್ತಿ ಭದ್ರತೆ ಒದಗಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟರು.

ಪ್ರತಿಭಟನೆಯಲ್ಲಿ ಬಿಎಂಎಸ್ ರಾಜ್ಯ ಉಪಾಧ್ಯಕ್ಷ ಸತೀಶ್ ಶೆಟ್ಟಿ, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಸೇರಿದಂತೆ ಅಪಾರ ಸಂಖ್ಯೆಯ ಆಶಾ ಕಾರ್ಯಕರ್ತೆಯರು, ಆಟೋ ಚಾಲಕರು ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರು ಭಾಗವಹಿಸಿದ್ದರು.

