ಮಂಗಳೂರು: ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಹಿಂದುಳಿದ ವರ್ಗಗಳ ಹಕ್ಕುಗಳನ್ನು ಬಲಪಡಿಸುವ ಉದ್ದೇಶದಿಂದ ಅಹಿಂದ ಚಳುವಳಿಯ ವತಿಯಿಂದ ಸರ್ಕಾರದ ಮುಂದಿಡಲಾಗಿರುವ ವಿವಿಧ ಪ್ರಮುಖ ಬೇಡಿಕೆಗಳನ್ನು ಶೀಘ್ರವಾಗಿ ಜಾರಿಗೆ ತರಬೇಕು. ಈ ಕುರಿತು ವಿಧಾನಸಭೆಯಲ್ಲಿ ನಡೆಯುವ ಕಲಾಪದಲ್ಲಿ ಕೂಡಲೇ ಚರ್ಚೆ ನಡೆಸಿ, ಬೇಡಿಕೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅಹಿಂದ ಚಳುವಳಿಯ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಚಾಲಕ ಸಿರಾಜ್ ಆಗ್ರಹಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕಾದ ಪ್ರಮುಖ ಬೇಡಿಕೆಗಳ ಕುರಿತು ಮಾಹಿತಿ ನೀಡಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಕಾಂತರಾಜ್ ಅಧ್ಯಕ್ಷತೆಯಲ್ಲಿ ರಚನೆಯಾದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಬಳಿಕ ಜಯಪ್ರಕಾಶ್ ಹೆಗ್ಡೆ ಅಧ್ಯಕ್ಷತೆಯ ಆಯೋಗ ಹಾಗೂ ಮಧುಸೂದನ್ ನಾಯಕ್ ಅಧ್ಯಕ್ಷತೆಯ ಆಯೋಗ ನಡೆಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಳ ವರದಿಗಳನ್ನು ಯಾವುದೇ ವಿಳಂಬವಿಲ್ಲದೆ ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.
ಈ ಸಮೀಕ್ಷೆಗಳಲ್ಲಿ ವಿವಿಧ ಸಮುದಾಯಗಳ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಅಂಕಿ-ಅಂಶಗಳು ಲಭ್ಯವಿವೆ. ಈ ದತ್ತಾಂಶದ ಆಧಾರದ ಮೇಲೆ ಕಲ್ಯಾಣ ಯೋಜನೆಗಳು ಹಾಗೂ ಮೀಸಲಾತಿಯನ್ನು ವೈಜ್ಞಾನಿಕವಾಗಿ ರೂಪಿಸಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

ಅದೇ ರೀತಿ, ಕೇಂದ್ರ ಸರ್ಕಾರವು ದೇಶಾದ್ಯಂತ ಜಾತಿಗಣತಿ ಹಾಗೂ ಜನಗಣತಿಯನ್ನು ಶೀಘ್ರವಾಗಿ ನಡೆಸಿ, ಅದರ ದತ್ತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಅಹಿಂದ ಚಳುವಳಿ ಆಗ್ರಹಿಸಿದೆ. ಇದರಿಂದ ವಿವಿಧ ಸಮುದಾಯಗಳ ವಾಸ್ತವಿಕ ಸ್ಥಿತಿಗತಿಗಳನ್ನು ಅರಿತು, ಸರ್ಕಾರದ ಸಂಪನ್ಮೂಲಗಳು ಹಾಗೂ ಸೌಲಭ್ಯಗಳನ್ನು ಅಗತ್ಯವಿರುವ ಸಮುದಾಯಗಳಿಗೆ ನ್ಯಾಯಯುತವಾಗಿ ಹಂಚಿಕೆ ಮಾಡಲು ಸಾಧ್ಯವಾಗಲಿದೆ ಎಂದು ತಿಳಿಸಿದರು.
ಈ ಎಲ್ಲ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿ ಹಾಗೂ ದೇಶದ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಸಿರಾಜ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ದೀಪಕ್ ಪೆರ್ಮುದೆ, ನಿಶಾಕ್ ಕರಾವಳಿ, ವಸಂತ್, ಮನೀಶ್, ಮೀನಾ ಟೆಲ್ಲಿಸ್ ಸೇರಿದಂತೆ ಅಹಿಂದ ಚಳುವಳಿಯ ಪ್ರಮುಖರು ಉಪಸ್ಥಿತರಿದ್ದರು.

