ಬೆಂಗಳೂರು:* ವಾಲ್ಮೀಕಿ ನಿಗಮದ ಹಣ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಲೋಕಾಯುಕ್ತ ಕಚೇರಿ ಕಡೆಯಿಂದ ವಿಧಾನಸೌಧದತ್ತ ಮುತ್ತಿಗೆಗೆ ತೆರಳಲು ಯತ್ನಿಸಿದರು. ಈ ವೇಳೆ ಪೊಲೀಸರು ವಿಧಾನಸೌಧದ ಗೇಟ್ ಬಳಿಯೇ ಪ್ರತಿಭಟನಾಕಾರರನ್ನು ತಡೆದು ವಶಕ್ಕೆ ಪಡೆದರು.

ವಿಕಾಸಸೌಧದ ಗೇಟ್ ಮುಂಭಾಗದ ರಸ್ತೆಯಲ್ಲೇ ಬಿಜೆಪಿ ಕಾರ್ಯಕರ್ತರು ಕುಳಿತು ಪ್ರತಿಭಟನೆ ನಡೆಸಿದರು. ಬಳಿಕ ಪೊಲೀಸರು ವಶಕ್ಕೆ ಪಡೆದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕರೆದೊಯ್ದರು.
ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ತೀವ್ರ ಸಂಚಾರ ದಟ್ಟಣೆ ಉಂಟಾಯಿತು. ವಿಶೇಷವಾಗಿ ಶಾಸಕರು ಪ್ರವೇಶಿಸುವ ದ್ವಾರದ ಬಳಿ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಯಿತು.

