ಮಂಗಳೂರು: ಕಲಾಸಾಧನ ಸಂಸ್ಥೆಯ ಆಶ್ರಯದಲ್ಲಿ ರಾಮಕೃಷ್ಣ ಮಿಷನ್ ಸಹಯೋಗದೊಂದಿಗೆ ಸೆಪ್ಟೆಂಬರ್ 6ರಂದು ಸಂಜೆ 5 ಗಂಟೆಗೆ ನಗರದ ಶ್ರೀರಾಮಕೃಷ್ಣ ಮಠದಲ್ಲಿ ‘ರಾಗ ಸುಧಾ’ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಲಾಸಾಧನ ಸಂಸ್ಥೆಯ ನಿರ್ದೇಶಕಿ ವಿಭಾ ಶ್ರೀನಿವಾಸ್ ನಾಯಕ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ಕಲಾವಿದರು ಕಾರ್ಯಕ್ರಮದಲ್ಲಿ ಸಂಗೀತ ಪ್ರಸ್ತುತಪಡಿಸಲಿದ್ದಾರೆ. ಗ್ವಾಲಿಯರ್ ಘರಾನಾದ ಖ್ಯಾತ ಗಾಯಕ ಆದಿತ್ಯ ಮೋದಕ್, ಗ್ವಾಲಿಯರ್-ಕಿರಾಣಾ ಪದ್ಧತಿಯ ಗಾಯಕ ಹಾಗೂ ಹಾರ್ಮೋನಿಯಂ ವಾದಕ ಸತೀಶ್ ಭಟ್ ಹೆಗ್ಗಾರ್ ಮತ್ತು ತಬಲಾ ವಾದಕ, ಗಾಯಕ ಅಕ್ಷಯ ಜೋಶಿ ಭಾಗವಹಿಸಲಿದ್ದಾರೆ ಎಂದರು.

ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬಳಿಕ ಕಲಾವಿದರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮಕ್ಕೆ ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.
ಕಲಾಸಾಧನ ಸಂಸ್ಥೆಯು ಕಳೆದ ಹತ್ತು ವರ್ಷಗಳಿಂದ ಭಾರತೀಯ ಶಾಸ್ತ್ರೀಯ ಸಂಗೀತದ ಪ್ರಚಾರ ಹಾಗೂ ಯುವ ಕಲಾವಿದರಿಗೆ ವೇದಿಕೆ ಕಲ್ಪಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಸಂಗೀತ ತರಬೇತಿಯನ್ನೂ ನೀಡುತ್ತಿದೆ ಎಂದು ವಿಭಾ ಶ್ರೀನಿವಾಸ್ ನಾಯಕ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಗೌರವ ಸಲಹೆಗಾರ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು.

