ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಬೆಂಕಿಗಾಹುತಿಯಾಗಿರುವ ಘಟನೆಯಲ್ಲಿ ಮೃತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.ಕರ್ನೂಲ್ ಜಿಲ್ಲೆಯ ಚಿನ್ನಾಟೇಕೂರ್ ಬಳಿ ಶುಕ್ರವಾರ ಬೆಳಗಿನ ಜಾವ ಘಟನೆ ನಡೆದಿದೆ. ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಭಾರೀ ಸ್ಫೋಟ ಸಂಭವಿಸಿ, ಕೆಲವೇ ಕ್ಷಣಗಳಲ್ಲಿ ಬಸ್ ಬೆಂಕಿಗಾಹುತಿಯಾಗಿದೆ. ಬೆಂಕಿಯ ತೀವ್ರತೆಗೆ ಇಡೀ ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದೆ.
ಬಸ್ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎನ್ನಲಾಗಿದೆ. ಇವರಲ್ಲಿ 18 ಮಂದಿಯನ್ನು ಜೀವಂತವಾಗಿ ರಕ್ಷಿಸಲಾಗಿದೆ. ಹಲವರ ಮೃತದೇಹ ಸಂಪೂರ್ಣವಾಗಿ ಸುಟ್ಟುಹೋಗಿರುವುದರಿಂದ ಗುರುತು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ತಿಳಿದು ಬಂದಿದೆ.ಬಸ್ ದುರಂತದಲ್ಲಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಇಂತಹ ಕಷ್ಟದ ಸಮಯದಲ್ಲಿ ಸಂತ್ರಸ್ತರ ಕುಟುಂಬಗಳ ಜೊತೆ ನಾವಿದ್ದೇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.