ಕರ್ನಲ್ ಸೋಫಿಯಾ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಸಚಿವ ವಿಜಯ್ ಶಾ ವಿರುದ್ಧ ಎಫ್ಐಆರ್ ದಾಖಲಿಸಲು ಬೆಳಗಾವಿ ಎಸ್ಪಿಗೆ ಗೃಹ ಸಚಿವ ಪರಮೇಶ್ವರ್ ಸೂಚಿಸಿದ್ದಾರೆ. ಇದು ಕರ್ನಲ್ ಖುರೇಷಿ ಅವರಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ಮಾಡಿದ ಅವಮಾನ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷದ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸೇನಾ ಮಾಹಿತಿಯನ್ನು ಹಂಚಿಕೊಂಡಿದ್ದ ಕರ್ನಲ್ ಸೋಫಿಯಾ ಕುರಿತಾಗಿ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ಮಧ್ಯಪ್ರದೇಶದ ಸಚಿವ ಹಾಗೂ ಬಿಜೆಪಿ ಮುಖಂಡ ವಿಜಯ್ ಶಾ ವಿರುದ್ಧ ಎಫ್ ಐ ಆರ್ ದಾಖಲು ಮಾಡಲು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಲಾಗಿದೆ.
ಸೋಫಿಯಾ ಖುರೇಷಿ ಬೆಳಗಾವಿ ಸೊಸೆ ಆಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಈ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಈ ಕುರಿತಾಗಿ ಮಾತನಾಡಿದ ಅವರು, ಮಧ್ಯಪ್ರದೇಶದ ಸಚಿವ ಹಾಗೂ ಬಿಜೆಪಿ ಮುಖಂಡ ವಿಜಯ್ ಶಾ ಎಂಬುವರು ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯಿಸಿ, ಕರ್ನಲ್ ಸೋಫಿಯಾ ಖುರೇಷಿ ಅವರು ಬೆಳಗಾವಿಯ ಸೊಸೆ. ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವನ ವಿರುದ್ಧ ಎಫ್ಐಆರ್ ಮಾಡಿಕೊಂಡು, ಕ್ರಮ ತೆಗೆದುಕೊಳ್ಳುವ ಕುರಿತಂತೆ ಕೇಂದ್ರ ಸರ್ಕಾರಕ್ಕೆ ತಿಳಿಸುವಂತೆ ಬೆಳಗಾವಿ ಎಸ್ಪಿ ಅವರಿಗೆ ಸೂಚಿಸಿದ್ದೇನೆ ಎಂದರು.
ಬಿಜೆಪಿ ಮುಖಂಡನ ಹೇಳಿಕೆ ಕರ್ನಲ್ ಖುರೇಷಿ ಅವರಿಗಷ್ಟೆ ಅವಮಾನದಂತೆ ಅಲ್ಲ. ಇಡೀ ದೇಶಕ್ಕೆ ಅವಮಾನ ಮಾಡಿದಂತೆ. ಇಂತಹ ಕೀಳು ಮನಸ್ಸು ಯಾರಿಗೂ ಬರಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಧ್ಯಪ್ರದೇಶ ಸಚಿವ ಭಾಷಣ ಮಾಡುವ ಸಂದರ್ಭದಲ್ಲಿ ಕರ್ನಲ್ ಸೋಫಿಯಾ ಖುರೇಷಿಯನ್ನು ಉಗ್ರರ ಸಹೋದರಿ ಎಂದಿದ್ದರು. ಬಳಿಕ ತಮ್ಮ ಹೇಳಿಕೆಗೆ ಕ್ಷಮೆಯಾಚನೆ ಮಾಡಿದ್ದರು. ಸಚಿವರ ಹೇಳಿಕೆ ಭಾರೀ ವಿರೋಧಕ್ಕೆ ಕಾರಣವಾಗುತ್ತಿದೆ.