ಕೋಲ್ಕತ್ತಾ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಮುನ್ನ ಬಹಿರಂಗ ಪ್ರಚಾರ ಇಂದು ಅಂತ್ಯಗೊಳ್ಳಲಿದೆ. ಏಪ್ರಿಲ್ 29ರಂದು ಮತದಾನ ನಡೆಯಲಿದ್ದು, ಭದ್ರತಾ ವ್ಯವಸ್ಥೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲಾಗಿದೆ.
ಚುನಾವಣಾ ಆಯೋಗವು ಮತದಾನಕ್ಕೆ ಅಡ್ಡಿಪಡಿಸುವ ಅಥವಾ ಮತದಾರರನ್ನು ಬೆದರಿಸುವ ಯಾವುದೇ ಪ್ರಯತ್ನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ಕೊನೆಯ ದಿನದ ಪ್ರಚಾರದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷ ಭರ್ಜರಿ ರ್ಯಾಲಿ ಮತ್ತು ಸಭೆಗಳನ್ನು ನಡೆಸಲಿವೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖ ನಾಯಕರು ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.
ಇದಕ್ಕೂ ನಡುವೆ, ದಕ್ಷಿಣ 24 ಪರಗಣ ಜಿಲ್ಲೆಯ ಭಂಗಾರ್ ಪ್ರದೇಶದಲ್ಲಿ ಟಿಎಂಸಿ ಕಾರ್ಯಕರ್ತನ ಮನೆಯಿಂದ ಡಜನ್ಗಟ್ಟಲೆ ಕಚ್ಚಾ ಬಾಂಬ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಚ್ಚಾ ಬಾಂಬ್ ತಯಾರಿಕೆಯಲ್ಲಿ ತೊಡಗಿರುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲು ಚುನಾವಣಾ ಆಯೋಗ ಸೂಚನೆ ನೀಡಿದ್ದು, ಸಂಬಂಧಿತ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಪರಿಶೀಲಿಸಲಿದೆ.
ಮತದಾರರು ನಿರ್ಭೀತಿಯಿಂದ ಮತಚಲಾಯಿಸಲು ಎಲ್ಲಾ ಕ್ಷೇತ್ರಗಳಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲು ಸೂಚಿಸಲಾಗಿದೆ. ಏಪ್ರಿಲ್ 29ರಂದು ಮತದಾನ ನಡೆಯಲಿರುವ 142 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕೋಲ್ಕತ್ತಾ ವ್ಯಾಪ್ತಿಯ ಮೂರು ಚುನಾವಣಾ ಜಿಲ್ಲೆಗಳ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಕೇಂದ್ರ ಪಡೆಗಳ ಕಮಾಂಡರ್ಗಳೊಂದಿಗೆ ಉನ್ನತ ಮಟ್ಟದ ಸಮನ್ವಯ ಸಭೆ ನಡೆಸಿ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.
ಸಭೆಯಲ್ಲಿ ಕೋಲ್ಕತ್ತಾ ಪೊಲೀಸ್ ಆಯುಕ್ತರು, ಕೋಲ್ಕತ್ತಾ ಉತ್ತರ, ಕೋಲ್ಕತ್ತಾ ದಕ್ಷಿಣ ಹಾಗೂ ದಕ್ಷಿಣ 24 ಪರಗಣ ಜಿಲ್ಲೆಯ ಚುನಾವಣಾ ಅಧಿಕಾರಿಗಳು, ಸಾಮಾನ್ಯ ಮತ್ತು ಪೊಲೀಸ್ ವೀಕ್ಷಕರು, ವಿಶೇಷ ವೀಕ್ಷಕ ಸುಬ್ರತಾ ಗುಪ್ತಾ ಹಾಗೂ ವಿಶೇಷ ಪೊಲೀಸ್ ವೀಕ್ಷಕ ಎನ್.ಕೆ. ಮಿಶ್ರಾ ಉಪಸ್ಥಿತರಿದ್ದರು.
ಇದೇ ವೇಳೆ ದಕ್ಷಿಣ 24 ಪರಗಣ ಜಿಲ್ಲೆಯ ಕಾಕ್ದ್ವೀಪ್ಗೆ ಭೇಟಿ ನೀಡಿದ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್, ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮತದಾರರು ಮುಕ್ತವಾಗಿ ಮತಚಲಾಯಿಸಲು ಮನವಿ ಮಾಡಿದರು.
ಪ್ರತಿ ಮತಗಟ್ಟೆಯಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು, ಕೇಂದ್ರೀಯ ಪಡೆಗಳನ್ನು ನಿಯೋಜಿಸಲಾಗುವುದು ಹಾಗೂ ಮತಗಟ್ಟೆಯಿಂದ 100 ಮೀಟರ್ ವ್ಯಾಪ್ತಿಯಲ್ಲಿ ಅನಧಿಕೃತ ವ್ಯಕ್ತಿಗಳಿಗೆ ಅವಕಾಶ ಇರುವುದಿಲ್ಲ ಎಂದು ಅವರು ತಿಳಿಸಿದರು. ಚುನಾವಣಾ ಪ್ರಕ್ರಿಯೆಯ ಮೇಲಿನ ನಂಬಿಕೆಯನ್ನು ಬಲಪಡಿಸುವುದು ನಮ್ಮ ಗುರಿ ಎಂದು ಹೇಳಿದರು.
ಏಪ್ರಿಲ್ 23ರಂದು ಮೊದಲ ಹಂತದ ಮತದಾನ ನಡೆದಿದ್ದು, ಎರಡನೇ ಹಂತದ ಮತದಾನ ಏಪ್ರಿಲ್ 29ರಂದು ನಡೆಯಲಿದೆ. ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.