ನವದೆಹಲಿ: ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ನೀಟ್-ಯುಜಿ 2026 ಪರೀಕ್ಷಾ ಅಕ್ರಮ ವಿವಾದದ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ದೇಶದ ಯುವಜನತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿರುವ ಅವರು, ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರವಾನಿಸಿದ್ದಾರೆ.


ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿರುವ ಎರಡು ಪುಟಗಳ ಸುದೀರ್ಘ ಪತ್ರದಲ್ಲಿ ದೇಶದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿರುವ ಧರ್ಮೇಂದ್ರ ಪ್ರಧಾನ್, “ಮೇ 3, 2026ರಂದು ನಡೆದ ನೀಟ್-ಯುಜಿ ಪರೀಕ್ಷೆಗೆ ಸಂಬಂಧಿಸಿದ ಬೆಳವಣಿಗೆಗಳ ನೈತಿಕ ಹೊಣೆಯನ್ನು ಮೊದಲ ದಿನದಿಂದಲೇ ನಾನು ಹೊತ್ತಿದ್ದು, ಯಾವುದೇ ಹಂತದಲ್ಲೂ ಪರಿಸ್ಥಿತಿಯಿಂದ ಹಿಂದೆ ಸರಿಯುವ ಪ್ರಯತ್ನ ಮಾಡಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಅಕ್ರಮಗಳ ವಿರುದ್ಧ ಸರ್ಕಾರ ಕೈಗೊಂಡ ತಕ್ಷಣದ ಕ್ರಮಗಳನ್ನು ಉಲ್ಲೇಖಿಸಿರುವ ಅವರು, ಪರೀಕ್ಷೆಯಲ್ಲಿ ಅಕ್ರಮ ಬೆಳಕಿಗೆ ಬಂದ ತಕ್ಷಣವೇ ಕೇಂದ್ರ ಸರ್ಕಾರವು ಸಮಗ್ರ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಜೊತೆಗೆ ಹಳೆಯ ಪರೀಕ್ಷೆಯನ್ನು ರದ್ದುಗೊಳಿಸಿ ಮರುಪರೀಕ್ಷೆ ನಡೆಸುವ ನಿರ್ಧಾರವನ್ನೂ ಕೈಗೊಳ್ಳಲಾಗಿತ್ತು. ಮುಂದಿನ ದಿನಗಳಲ್ಲಿ ಇಂತಹ ಲೋಪಗಳು ಪುನರಾವರ್ತನೆಯಾಗದಂತೆ ತಡೆಯಲು ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ (CBT) ಮಾದರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.


