ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ನಿವೇಶನ ಗುರುತಿಸುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಲಾಯಿತು.
ನಮ್ಮ ವ್ಯಾಪ್ತಿಯಲ್ಲಿ ಸದ್ಯ ಒಟ್ಟು 59 ಅಂಗನವಾಡಿಗಳಿಗೆ ನಿವೇಶನವಿಲ್ಲ. ಅದರಲ್ಲಿಯೂ 29 ಬಾಡಿಗೆ ಕಟ್ಟಡಗಳಲ್ಲಿವೆ. ಪುಟ್ಟ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸುಸಜ್ಜಿತ ಅಂಗನವಾಡಿ ಕೇಂದ್ರಗಳು ಅತ್ಯಂತ ಬಹು ಮುಖ್ಯವಾಗಿವೆ. ಹೀಗಿರುವಾಗ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ನಿವೇಶನ ಗುರುತಿಸುವ ಕೆಲಸವು ಶೀಘ್ರವಾಗಿ ನಡೆಯಬೇಕು. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಮುತುವರ್ಜಿ ವಹಿಸಿ ಈ ಮಾಸಾಂತ್ಯದೊಳಗೆ ಕಡ್ಡಾಯವಾಗಿ ವಿವರವಾದ ವರದಿ ಸಲ್ಲಿಸಬೇಕು. ಆ ನಂತರ ಮುಂದಿನ ಕಾರ್ಯಸಾಧ್ಯತೆಗಳ ಬಗ್ಗೆ ವಿಶೇಷ ಗಮನ ಹರಿಸಲಾಗುವುದು ಎಂದು ಶಾಸಕರು ಸೂಚನೆ ನೀಡಿದರು.
ಸಭೆಯಲ್ಲಿ ಕಂದಾಯ ಇಲಾಖೆ, ಮಹಾನಗರ ಪಾಲಿಕೆ, ಮುಡಾ, ಗ್ರಾಮ ಲೆಕ್ಕಾಧಿಕಾರಿಗಳು, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮತ್ತು ಮೇಲ್ವಿಚಾರಕರು ಉಪಸ್ಥಿತರಿದ್ದರು.