ಚುನಾವಣೆ ಸಮಯದಲ್ಲಿ ಮಾತ್ರ ರಾಜಕೀಯ, ಅಭಿವೃದ್ಧಿಗಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡೋಣ, ಉಳಿದ ಸಂದರ್ಭದಲ್ಲಿ ಅಭಿವೃದ್ಧಿ ಕಡೆಗಷ್ಟೆ ಗಮನ ಹರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ಬೈಂದೂರು ಉತ್ಸವದಲ್ಲಿ ಮಾತನಾಡಿದ ಸಚಿವರು, ಅಭಿವೃದ್ಧಿ ವಿಚಾರದಲ್ಲಿ ನಾನು ಎಂದಿಗೂ ರಾಜಕಾರಣ ಮಾಡಿಲ್ಲ, ಮಾಡುವುದೂ ಇಲ್ಲ, ಅಭಿವೃದ್ಧಿಗಷ್ಟೇ ಆದ್ಯತೆ ನೀಡುತ್ತೇನೆ ಎಂದರು.

ಮಹಾತ್ಮ ಗಾಂಧಿಯವರ ಅವರ ಪರಿಕಲ್ಪನೆಯಂತೆ ಶಾಸಕ ಗುರುರಾಜ್ ಗಂಟಿಹೊಳೆ ಅವರು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮ ಸ್ವರಾಜ್, ಮಹಿಳೆಯರ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ. ಮಹಾತ್ಮ ಗಾಂಧಿ ಹೇಳಿದಂತೆ, ಭಾರತದ ಹಳ್ಳಿಗಳ ದೇಶ, ಹಳ್ಳಿಗಳು ಅಭಿವೃದ್ಧಿಯಾಗಬೇಕು, ಮಹಿಳೆಯರು ಸಬಲೀಕರಣ ಆಗಬೇಕು ಎಂದು ಸಚಿವರು ಹೇಳಿದರು.ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ. ನನಗೆ ಕಾಂಗ್ರೆಸ್ ಪಕ್ಷ ಅಂದರೆ ತಂದೆ ತಾಯಿ‌ ಇದ್ದಂತೆ. ಶಾಸಕ‌ ಗುರುರಾಜ್ ಗಂಟಿಹೊಳೆ ಅವರು ಕೂಡ ಅವರ ಪಕ್ಷಕ್ಕೆ ನಿಷ್ಟಾವಂತ.‌ ಆದರೆ, ನಾವು ಜನಪ್ರತಿನಿಧಿಗಳಾಗಿ ಸಾಮಾಜಿಕ ದೃಷ್ಟಿಯಿಂದ ನೋಡಬೇಕು, ಸಾಮಾಜಿಕ ಕಾಳಜಿ, ಬದ್ಧತೆ ಕೆಲಸ ಮಾಡಬೇಕು. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡಿ, ಉಳಿದ ಸಮಯದಲ್ಲಿ ಅಭಿವೃದ್ಧಿಗೆ ಗಮನಹರಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರ, ಮಹಿಳೆಯರ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಗೃಹಲಕ್ಷ್ಮಿ, ಶಕ್ತಿ, ಗೃಹ ಜ್ಯೋತಿ ಯೋಜನೆಗಳಿಂದ ಮಹಿಳೆಯರಿಗೆ ಸಾಕಷ್ಟು ಪ್ರಯೋಜನ ಆಗಿದೆ. ನಮ್ಮ ಇಲಾಖೆಯಿಂದ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಮುಂದುವರಿದ ಭಾಗವಾಗಿ ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್, ಗೃಹಲಕ್ಷ್ಮಿ ಡಿಜಿಟಲ್ ಆ್ಯಪ್ ಶೀಘ್ರವೆ ಜಾರಿಗೆ ಬರಲಿವೆ ಎಂದರು.ನಿಸ್ವಾರ್ಥತೆಯಿಂದ ಎಲ್ಲರೂ ಉತ್ತಮ ಕೆಲಸ ಮಾಡಬೇಕು. ದೇವರು ನಮಗೆ ವರನೂ ಕೊಡೊದಿಲ್ಲ, ಶಾಪನೂ ಕೊಡೊದಿಲ್ಲ.‌ಕೆಲಸ ಮಾಡಲು ಅವಕಾಶ ಕೊಡುತ್ತಾನೆ. ಮಾಡುವ ಕೆಲಸವನ್ನು ಜನರಿಗೆ ಸಾರ್ಥಕತೆಯಿಂದ ಮಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ‌

ಈ ವೇಳೆ ಶಾಸಕ ಗುರುರಾಜ್ ಗಂಟಿಹೊಳೆ, ಆಳ್ವಾ ಶಿಕ್ಷಣ ಸಂಸ್ಥೆಗಳು ‌ಅಧ್ಯಕ್ಷ‌ ಮೋಹನ್ ಆಳ್ವ, ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್, ಎಎಸ್ಪಿ ಸುಧಾಕರ್, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಬರುವ ಗ್ರಾಮೀಣ ಪ್ರದೇಶವನ್ನು ಪಂಚಾಯತ್ ಆಗಿ ರಚನೆ ಮಾಡುವಂತೆ ಆಗ್ರಹಿಸಿ ತಾಲೂಕು ಕಚೇರಿ ಆವರಣದಲ್ಲಿ ಬೈಂದೂರು ತಾಲೂಕು ರೈತ ಸಂಘದ ವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಸಚಿವರು ಭೇಟಿ ನೀಡಿ ಮನವಿ ಸ್ವೀಕರಿಸಿದರು. ರೈತರಿಗೆ ಅನ್ಯಾಯ ಆಗದಂತೆ ಕ್ರಮಕೈಗೊಳ್ಳಲಾಗುವುದು, ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!