ಚಾರ್ಮಾಡಿ: ಚಾರ್ಮಾಡಿ ಘಾಟ್ನಲ್ಲಿ ಟಿಟಿ ವಾಹನ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರನ್ನು ಶೇಖರಪ್ಪ (59) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮೇಲನಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ.
ಘಟನೆಯ ವಿವರಗಳ ಪ್ರಕಾರ, ಮೇಲನಹಳ್ಳಿ ಗ್ರಾಮದ ಒಟ್ಟು 10 ಮಂದಿ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾರ್ಮಾಡಿ ಘಾಟ್ನ ಒಂಬತ್ತನೇ ತಿರುವಿನಲ್ಲಿ ವಾಹನದ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಅಪಘಾತದಲ್ಲಿ ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಾಯಾಳುಗಳಲ್ಲಿ ಒಬ್ಬರಾದ ಶೇಖರಪ್ಪ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಶನಿವಾರ ಬೆಳಗ್ಗೆ ಸಂಭವಿಸಿದ ಈ ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.