ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಗುರುತುಗಳಿಗೆ ಅವಕಾಶ: ಬ್ಯಾರಿಸ್ ಸೆಂಟ್ರಲ್ ಕಮಿಟಿ ಸ್ವಾಗತ

ಬೆಂಗಳೂರು:ಶೈಕ್ಷಣಿಕ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಧಾರ್ಮಿಕ ಹಾಗೂ ಸಾಂಪ್ರದಾಯಿಕ ಹಕ್ಕುಗಳನ್ನು ಗೌರವಿಸುವ ದಿಸೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಬ್ಯಾರಿಸ್ ಸೆಂಟ್ರಲ್ ಕಮಿಟಿಯು ಸ್ವಾಗತಿಸುತ್ತದೆ ಎಂದು ಬೆಂಗಳೂರಿನ ಬ್ಯಾರಿಸ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಶಬೀರ್ ಬ್ರಿಗೇಡ್ ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಾಮಾನ್ಯವಾಗಿ ಧರಿಸುವ ಪೇಟ/ಟರ್ಬನ್, ಜನಿವಾರ/ಪವಿತ್ರ ದಾರ, ಶಿವದಾರ, ರುದ್ರಾಕ್ಷಿ, ತಲೆವಸ್ತ್ರ/ಹಿಜಾಬ್ ಸೇರಿದಂತೆ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತ ಸಂಕೇತಗಳನ್ನು ಶಿಸ್ತು, ಸುರಕ್ಷತೆ ಮತ್ತು ಗುರುತಿಸುವಿಕೆಗೆ ಅಡ್ಡಿಯಾಗದ ರೀತಿಯಲ್ಲಿ ಧರಿಸಲು ಅವಕಾಶ ಕಲ್ಪಿಸಿರುವುದು ಸಂವಿಧಾನಬದ್ಧ ಹಕ್ಕುಗಳಿಗೆ ಗೌರವ ನೀಡಿದಂತಾಗಿದೆ. ವಿಶೇಷವಾಗಿ, ಇಂತಹ ಸೀಮಿತ ಸಾಂಪ್ರದಾಯಿಕ ಅಥವಾ ಧಾರ್ಮಿಕ ಸಂಕೇತಗಳನ್ನು ಧರಿಸಿರುವ ಕಾರಣಕ್ಕೆ ಯಾವುದೇ ವಿದ್ಯಾರ್ಥಿಗೆ ಶಿಕ್ಷಣ ಸಂಸ್ಥೆ, ತರಗತಿ ಕೊಠಡಿ, ಪರೀಕ್ಷಾ ಕೇಂದ್ರ ಅಥವಾ ಇತರೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿರಾಕರಿಸಬಾರದು ಎಂಬ ಸ್ಪಷ್ಟ ಸೂಚನೆ ಸಮಾನತೆ ಮತ್ತು ಶಿಕ್ಷಣದ ಹಕ್ಕನ್ನು ಬಲಪಡಿಸುತ್ತದೆ ಎಂದು ತಿಳಿಸಿದರು.

ಬಳಿಕ‌ ಮಾತನಾಡಿದ ಬಿಸಿಸಿಯ ಕಾನೂನು ಸಲಹೆಗಾರರಾದ ಅಡ್ವೊಕೇಟ್ ಖಲಂದರ್ ಕೊಯಿಲ, ವೈವಿಧ್ಯತೆಯೇ ಭಾರತದ ಶಕ್ತಿಯಾಗಿದ್ದು, ಶಿಕ್ಷಣ ಸಂಸ್ಥೆಗಳು ಸಹಿಷ್ಣುತೆ, ಪರಸ್ಪರ ಗೌರವ ಮತ್ತು ಸಂವಿಧಾನಿಕ ಮೌಲ್ಯಗಳನ್ನು ಬೆಳೆಸುವ ಕೇಂದ್ರಗಳಾಗಬೇಕು. ವಿದ್ಯಾರ್ಥಿಗಳ ಧಾರ್ಮಿಕ ಮತ್ತು ಸಾಂಸ್ಕೃತಿಕ ಗುರುತನ್ನು ಗೌರವಿಸುವ ಮೂಲಕ ಸಮಾನ ಹಾಗೂ ಒಳಗೊಂಡ ಶಿಕ್ಷಣ ವಾತಾವರಣ ನಿರ್ಮಾಣ ಸಾಧ್ಯ. ಈ ಮಾರ್ಗಸೂಚಿಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಸಂಬಂಧಿತ ಅಧಿಕಾರಿಗಳನ್ನು ಆಗ್ರಹಿಸಬೇಕು. ಜೊತೆಗೆ, ಯಾವುದೇ ವಿದ್ಯಾರ್ಥಿಯ ಶಿಕ್ಷಣ ಹಕ್ಕಿಗೆ ಧಕ್ಕೆ ಉಂಟಾಗದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಸೂಕ್ಷ್ಮತೆಯಿಂದ ವರ್ತಿಸಬೇಕು ಎಂದು ಮನವಿ ಮಾಡುತ್ತೇವೆ ಎಂದು ತಿಳಿಸಿದರು.

ಶಿಕ್ಷಣ ಸಂಸ್ಥೆಗಳು ವೈಚಾರಿಕತೆ, ವೈಜ್ಞಾನಿಕತೆ, ಸಮಾನತೆ, ಭ್ರಾತೃತ್ವ, ಘನತೆ, ಪರಸ್ಪರ ಗೌರವ ಮತ್ತು ಜಾತ್ಯತೀತ ದೃಷ್ಟಿಕೋನವನ್ನು ಉತ್ತೇಜಿಸಬೇಕು. ಸಾಂವಿಧಾನಿಕ ಅರ್ಥದಲ್ಲಿ ಜಾತ್ಯತೀತತೆ ಎಂದರೆ ವೈಯಕ್ತಿಕ ನಂಬಿಕೆಗಳಿಗೆ ವಿರುದ್ಧವಲ್ಲ ಬದಲಾಗಿ ಎಲ್ಲರಿಗೂ ಸಮಾನ ಗೌರವ ನೀಡುವಿಕೆ, ಸಾಂಸ್ಥಿಕ ನಿಷ್ಪಕ್ಷಪಾತತೆ ಮತ್ತು ತಾರತಮ್ಯ ರಹಿತ ವರ್ತನೆಯಾಗಿದೆ. ಸರ್ಕಾರವು ಸಾಂವಿಧಾನಿಕ ತತ್ವಗಳಿಗೆ ಅನುಗುಣವಾಗಿ ಎಲ್ಲಾ ಧರ್ಮ ಮತ್ತು ಸಂಪ್ರದಾಯಗಳ ಬಗ್ಗೆ ತಟಸ್ಥ ಮತ್ತು ಸಮಾನ ನಿಲುವು ಹೊಂದಿರಬೇಕಿದೆ. ಮುಸ್ಲಿಂ ಹೆಣ್ಣು ಮಕ್ಕಳು ಧರಿಸುವ ಹಿಜಾಬ್ ಮತ್ತು ನಖಾಬ್ ಬಗ್ಗೆ ಸಮಾಜದಲ್ಲಿ ವ್ಯವಸ್ಥಿತವಾಗಿ ಗೊಂದಲ ಸೃಷ್ಟಿ ಮಾಡಲಾಗಿದೆ. ನಖಾಬ್ ಬೇರೆಯೇ, ಹಿಜಾಬ್ ಬೇರೆಯೇ ಎಂಬ‌ ವಾಸ್ತವ ಸತ್ಯವನ್ನು ಮಾಧ್ಯಮಗಳು ಜನರಿಗೆ ತಿಳಿಸಬೇಕು ಎಂದು ಖಲಂದರ್ ಕೊಯಿಲ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಬ್ಯಾರಿಸ್ ಸೆಂಟ್ರಲ್ ಕಮಿಟಿಯ ಪದಾಧಿಕಾರಿ ಶಫೀಕ್ ಮಲ್ಲೇಶ್ವರಂ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!