ಉಡುಪಿ: ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಪ್ರಥಮ ಬಾರಿಗೆ ವಿಪ್ರಬಾಂಧವರಿಗಾಗಿ ‘ಜಿಲ್ಲಾಮಟ್ಟದ ಭಜನಾ ಸ್ಪರ್ಧೆ’ಯನ್ನು ಮೇ 24ರಂದು ಗುಂಡಿಬೈಲಿನ ಬ್ರಾಹ್ಮ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಪರಿಷತ್ನ ವಿಷ್ಣುಪ್ರಸಾದ್ ಪಾಡಿಗಾರ್ ತಿಳಿಸಿದ್ದಾರೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಪರ್ಧೆಯು ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ ಎಂದರು.
ಪುರುಷರ ವಿಭಾಗ, ಮಹಿಳೆಯರ ವಿಭಾಗ ಹಾಗೂ ಮಕ್ಕಳ ವಿಭಾಗ ಸೇರಿದಂತೆ ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ವಿಜೇತರಿಗೆ ನಗದು ಬಹುಮಾನ ಹಾಗೂ ಪಾರಿತೋಷಕ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.
ಪ್ರಥಮ ಬಹುಮಾನವಾಗಿ ₹15 ಸಾವಿರ, ದ್ವಿತೀಯ ಬಹುಮಾನವಾಗಿ ₹10 ಸಾವಿರ ಹಾಗೂ ತೃತೀಯ ಬಹುಮಾನವಾಗಿ ₹5 ಸಾವಿರ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.