ಕೂಟೇಲಿನಲ್ಲಿ ಭೀಕರ ಅಪಘಾತ: ಲಾರಿ ಡಿಕ್ಕಿಗೆ ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯ

ಉಪ್ಪಿನಂಗಡಿ, ಜೂನ್ 2: ಕಾರೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕೂಟೇಲು ಪ್ರದೇಶದಲ್ಲಿ ನಡೆದಿದೆ.

ಕಾರ್ಕಳ ತಾಲೂಕಿನ ನಕ್ರೆ ನಿವಾಸಿಗಳಾದ ಕುಟುಂಬ ಸದಸ್ಯರು ಸುಬ್ರಹ್ಮಣ್ಯ ಕ್ಷೇತ್ರಕ್ಕೆ ವ್ಯಾಗನರ್ ಕಾರಿನಲ್ಲಿ ಯಾತ್ರೆ ಕೈಗೊಂಡಿದ್ದರು. ಕೂಟೇಲು ಸಮೀಪ ಕಾರು ಸಂಚರಿಸುತ್ತಿದ್ದ ವೇಳೆ ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ಕಾರಿನ ಚಾಲಕ ದೀಪಕ್ ಹಾಗೂ ಯಾತ್ರಾರ್ಥಿಗಳಾದ ಗುರುರಾಜ್, ಧನುಷ್, ಭಾರತಿ ಮತ್ತು ಗೀತಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಲಾರಿ ಚಾಲಕ ದಾಮೋದರ್ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ವಾಹನದಿಂದ ಹೊರತೆಗೆದು ರಕ್ಷಿಸುವಲ್ಲಿ ಸ್ಥಳೀಯರು ನೆರವಾದರು.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪುತ್ತೂರು ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ಕಾರಣವಾದ ಸಂದರ್ಭಗಳ ಕುರಿತು ತನಿಖೆ ಮುಂದುವರಿದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!