ಬಂಟ್ವಾಳ, ಜೂ. 10: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ರಸ್ತೆಯ ಆರಂಭ ಭಾಗದಲ್ಲಿ ಕೃತಕ ನೆರೆ ಉಂಟಾಗಿ ವಾಹನ ಸವಾರರು ಹಾಗೂ ಪಾದಚಾರಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.
ರಸ್ತೆಯಲ್ಲಿ ನೀರು ನಿಂತಿರುವ ಪರಿಣಾಮ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸ್ಥಳೀಯ ಅಂಗಡಿ ಮತ್ತು ಮುಂಗಟ್ಟುಗಳಿಗೆ ಆಗಮಿಸುವ ಗ್ರಾಹಕರು ಕೂಡ ತೊಂದರೆ ಅನುಭವಿಸುವಂತಾಗಿದೆ.
ಈ ಭಾಗದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ಹೆದ್ದಾರಿ ನಿರ್ಮಾಣದ ಗುತ್ತಿಗೆ ಸಂಸ್ಥೆ ರಸ್ತೆ ಅಗೆದು ಕಾಮಗಾರಿ ನಡೆಸಿದ್ದು, ಹಲವು ದಿನಗಳಾದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಮಳೆ ಬಂದಾಗ ಈ ರಸ್ತೆ ಹೊಳೆಯಂತಾಗಿ ಮಾರ್ಪಡುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ರಸ್ತೆಯನ್ನು ಶೀಘ್ರವೇ ಸುಸ್ಥಿತಿಗೆ ತರಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.