ಪುತ್ತೂರು, ಜೂ.12: ಕಾಂಗ್ರೆಸ್ ಆಡಳಿತವು ಭ್ರಷ್ಟಾಚಾರದ ಆಡಳಿತವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 12 ವರ್ಷಗಳಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಸ್ವಚ್ಛ ರಾಜಕಾರಣದ ಮಾದರಿಯನ್ನು ದೇಶಕ್ಕೆ ತೋರಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 12ನೇ ವರ್ಷದ ಸೇವೆ, ಸುಶಾಸನ ಮತ್ತು ಜನಕಲ್ಯಾಣ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲಗಳ ನೇತೃತ್ವದಲ್ಲಿ ಕಲ್ಲೇಗ ದೈವಸ್ಥಾನದ ವಠಾರದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶವು ಮತ್ತೊಮ್ಮೆ ಪರಮ ವೈಭವದತ್ತ ಸಾಗುತ್ತಿದ್ದು, ಮೋದಿ ಅವರು ಹಿಂದಿನ ಪ್ರಧಾನಿಗಳ ಹಲವು ದಾಖಲೆಗಳನ್ನು ಮುರಿದಿದ್ದಾರೆ ಎಂದು ಹೇಳಿದ ಕಿಶೋರ್ ಕುಮಾರ್, ಶೌಚಾಲಯ ನಿರ್ಮಾಣ, ಸ್ವಚ್ಛ ಭಾರತ ಅಭಿಯಾನ ಹಾಗೂ ಭಯೋತ್ಪಾದನೆ ವಿರುದ್ಧದ ಕ್ರಮಗಳ ಮೂಲಕ ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು. ಬಿಜೆಪಿ ಕಾರ್ಯಕರ್ತರು ಯಾವುದೇ ರೀತಿಯ ಭ್ರಷ್ಟಾಚಾರದಲ್ಲಿ ತೊಡಗದೆ ಜನಸೇವೆಗೆ ಬದ್ಧರಾಗಬೇಕು ಎಂದು ಕರೆ ನೀಡಿದರು.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ ಮಾತನಾಡಿ, ಮೋದಿ ಅವರ ನೇತೃತ್ವದಲ್ಲಿ ಸ್ವಚ್ಛತೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ದೊರೆತಿದ್ದು, ದೇಶದಾದ್ಯಂತ ಜನಜಾಗೃತಿ ಮೂಡಿಸುವ ಕೆಲಸ ನಡೆದಿದೆ ಎಂದು ಹೇಳಿದರು. ಹಿಂದುಳಿದ ವರ್ಗಗಳಿಗೆ ಬಿಜೆಪಿ ಸರ್ಕಾರ ವಿವಿಧ ಅವಕಾಶಗಳನ್ನು ಕಲ್ಪಿಸಿದ್ದು, ರಾಷ್ಟ್ರಸೇವೆಯಲ್ಲಿ ಇನ್ನಷ್ಟು ಸಕ್ರಿಯರಾಗುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಒಬಿಸಿ ನಗರ ಮಂಡಲದ ಅಧ್ಯಕ್ಷ ನಿರಂಜನ್ ಮಾನ್ಯ, ನಗರ ಮಂಡಲ ಅಧ್ಯಕ್ಷ ಶಿವಕುಮಾರ್, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಮಹೇಶ್ ಜೋಗಿ, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಜಿಲ್ಲಾ ಕಾರ್ಯದರ್ಶಿ ವಿದ್ಯಾಗೌರಿ, ಉಪಾಧ್ಯಕ್ಷರಾದ ರಾಘವೇಂದ್ರ ರಾವ್ ಹಾಗೂ ವಿನೋದ್ ಬೆಳೆಯೂರು ಸೇರಿದಂತೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.