ಪಂಪ: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.
ಸೋಮವಾರ ಮುಂಜಾನೆ ಕೊಚ್ಚಿನ್ನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿ, ಶ್ರೀ ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿದರು. ಬಳಿಕ ದೇವಸ್ಥಾನದಲ್ಲಿಯೇ ಇರುಮುಡಿ ಕಟ್ಟಿ ಶಬರಿಮಲೆ ಯಾತ್ರೆಗೆ ಚಾಲನೆ ನೀಡಿದರು.
ಮಧ್ಯಾಹ್ನದ ವೇಳೆಗೆ ಪಂಪಾ ನದಿ ತೀರ ತಲುಪಲಿರುವ ಸಚಿವರು, ಪವಿತ್ರ ಸ್ನಾನ ನೆರವೇರಿಸಿದ ಬಳಿಕ ಶಬರಿಮಲೆಯತ್ತ ಪಾದಯಾತ್ರೆ ಮುಂದುವರಿಸಲಿದ್ದಾರೆ.
ಸಂಜೆ ವೇಳೆ ಅಯ್ಯಪ್ಪ ಸನ್ನಿಧಿಯಲ್ಲಿ ನಡೆಯುವ ಪಡಿ ಪೂಜೆಯಲ್ಲಿ ಭಾಗವಹಿಸಲಿರುವ ಅವರು, ಬಳಿಕ ಶ್ರೀ ಅಯ್ಯಪ್ಪ ಸ್ವಾಮಿಗೆ ನಡೆಯುವ ಪುಷ್ಪಾಭಿಷೇಕ ಸೇವೆಯಲ್ಲೂ ಪಾಲ್ಗೊಳ್ಳಲಿದ್ದಾರೆ.
ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕುಮಾರಸ್ವಾಮಿಯವರು ಕೈಗೊಂಡಿರುವ ಮೊದಲ ಶಬರಿಮಲೆ ಯಾತ್ರೆ ಇದಾಗಿದೆ. ಈ ಹಿಂದೆ ಕೂಡ ಹಲವು ಬಾರಿ ಅವರು ಅಯ್ಯಪ್ಪ ಸ್ವಾಮಿಯ ಸನ್ನಿಧಿಗೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.