ಉಡುಪಿ: ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಕುರಿತು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪ್ರತೀ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆಮನೆ ಭೇಟಿಯ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ನಿಂದ ಜೂ. 23ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ. ಅವರು ಅಂಬಾಗಿಲಿನ ಅಮೃತ್ ಗಾರ್ಡನ್ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ಜೂ. 30 ರಿಂದ ಜು. 29 ರ ವರೆಗೆ ನಡೆಯಲಿದೆ. ಚುನಾವಣಾ ಆಯೋಗದ ಮೂಲಕ ಜನರ ಮತದಾನದ ಹಕ್ಕನ್ನು ಕಸಿಯುವ ಈ ಪ್ರಕ್ರಿಯೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರು ಬಿಎಲ್ಎ1, ಬಿಎಲ್ಎ 2 ಮತ್ತು ಕಾರ್ಯಕರ್ತರು ಸಂಪೂರ್ಣ ಸಜ್ಜಾಗಿದ್ದಾರೆ. ರಾಜ್ಯಾದ್ಯಂತ ಎಸ್ಐಆರ್ ಬಗ್ಗೆ ಜಾಗೃತಿ ಮೂಡಿಸಲು ಮನೆ ಮನೆ ಭೇಟಿ ಕಾರ್ಯಕ್ರಮವನ್ನು ಪಕ್ಷ ಹಮ್ಮಿಕೊಂಡಿದ್ದು, ಕೇಂದ್ರ ಸರಕಾರದ ವಿಫಲತೆಯನ್ನು ಮನೆ ಮನೆಗೆ ತಿಳಿಸಲಾಗುತ್ತದೆ ಎಂದರು.
ರಾಜ್ಯ ಸರಕಾರ 5 ಗ್ಯಾರಂಟಿಯ ಬದಲು 6 ಗ್ಯಾರಂಟಿ ನೀಡಿದೆ. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸರಕಾರದಿಂದ ಮತ್ತಷ್ಟು ಯೋಜನೆಗಳನ್ನು 2 ವರ್ಷದಲ್ಲಿ ಜಾರಿಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ, ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರಿಗಿಂತಲೂ ಹೆಚ್ಚು ದಿನಗಳ ಕಾಲ ಅಧಿಕಾರ ನಡೆಸಿದ್ದಾರೆ ಎಂದು ಬಿಜೆಪಿಗರು ವೈಭವೀಕರಿಸುತ್ತಾರೆ. ಆದರೆ ಪ್ರಧಾನಿ ಮೋದಿಯವರು ದೇಶಕ್ಕೆ ಯಾವ ಯೋಜನೆ ತಂದಿದ್ದಾರೆ ಎಂಬುದು ದೊಡ್ಡ ಪ್ರಶ್ನೆ. ಪ್ರತೀ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದು, ಈ ವರೆಗೆ ಆಗಿಲ್ಲ. ಬಿಜೆಪಿಗರು ಕೆಲವು ಕ್ಷೇತ್ರಗಳಲ್ಲಿ ಗೆಲ್ಲುವುದಕ್ಕೆ ಸಾಧ್ಯವಾಗದ ಕಾರಣ ಕಾಂಗ್ರೆಸ್ನಿಂದ ಗೆದ್ದು ಹೋದ ಸಂಸದರನ್ನು ಸೆಳೆಯುತ್ತಾರೆ. ಒಂದು ಪಕ್ಷದಲ್ಲಿದ್ದ ಸಂಸದರು, ಶಾಸಕರು ಬೇರೆ ಪಕ್ಷಕ್ಕೆ ಪಕ್ಷಾಂತರ ಮಾಡುವುದರ ವಿರುದ್ಧ ತಡೆ ತರಬೇಕೆಂದು ಅವರು ಒತ್ತಾಯಿಸಿದರು.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ದೇಶದ 12 ರಾಜ್ಯಗಳಲ್ಲಿ ಈಗಾಗಲೇ ಎಸ್ಐಆರ್ ಅನುಷ್ಠಾನವಾಗಿದ್ದು, 6-7 ಕೋಟಿ ಮತದಾರರು ತಮ್ಮ ಹಕ್ಕನ್ನು ಕಳೆದುಕೊಂಡಿದ್ದಾರೆ. ಅಲ್ಪಸಂಖ್ಯಾತರು ಹಾಗೂ ಎಸ್ಸಿ, ಎಸ್ಟಿ ತಳಸಮುದಾಯಗಳನ್ನು ಗುರಿ ಮಾಡಿಕೊಂಡು ಮತದಾನದ ಹಕ್ಕನ್ನು ಕಸಿಯಲಾಗುತ್ತಿದೆ. ಪಶ್ಚಿಮ ಬಂಗಾಲದಲ್ಲಿ 93 ಲಕ್ಷ ಮತದಾರರನ್ನು ಡಿಲಿಟ್ ಮಾಡಲಾಗಿತ್ತು. ಸಂವಿಧಾನ ವಿರೋ ನಡೆ ಮುಂದುವರಿದಿದ್ದು, ಮಮತಾ ಬ್ಯಾನರ್ಜಿ ಕ್ಷೇತ್ರದಲ್ಲಿ 1 ಲಕ್ಷ ಹಾಗೂ ಸ್ಟ್ಯಾಲಿನ್ ಕ್ಷೇತ್ರದಲ್ಲಿ 52 ಸಾವಿರ ಮತದಾರರನ್ನು ಕಿತ್ತು ಹಾಕಿದ್ದಾರೆ. ದೇಶದಲ್ಲಿ 11 ಕೋಟಿ ವಲಸೆ ಕಾರ್ಮಿಕರು ಇದ್ದಾರೆ ಎನ್ನುವುದೇ ಈ ದೇಶದ ಪ್ರಧಾನಿಗೆ ಗೊತ್ತಿಲ್ಲ. ಎಸ್ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ ಎಂದು ಆರೋಪಿಸಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಎಸ್ಐಆರ್ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಪರೋಕ್ಷವಾಗಿ ದೇಶದ ಪ್ರಜಾತಂತ್ರ ವ್ಯವಸ್ಥೆಯನ್ನು ಸರ್ವಾಕಾರದತ್ತ ತೆಗೆದುಕೊಂಡು ಹೋಗುತ್ತಿದೆ. ಸಂವಿಧಾನ ಬದ್ಧವಾಗಿ ಪೌರತ್ವ ನಿರ್ಧರಿಸುವ ಹಕ್ಕು ಚುನಾವಣಾ ಆಯೋಗಕ್ಕಿಲ್ಲ, ಸಾಂವಿಧಾನಿಕ ಕಾನೂನುಗಳನ್ನು ಮೀರಿ ಪ್ರಜಾಪ್ರಭುತ್ವದ ಆಶಯಕ್ಕೆ ಧಕ್ಕೆ ಮಾಡುತ್ತಿದೆ. ಉಡುಪಿ ಜಿಲ್ಲೆಯ 1111 ಬೂತ್ನಲ್ಲೂ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ ಎಂದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್ರಾಜ್ ಕಾಂಚನ್, ಮುನಿಯಾಲು ಉದಯ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕಬೈಲ್, ಹರಿಪ್ರಸಾದ್ ರೈ, ಅಲೆವೂರು ಹರೀಶ್ ಕಿಣಿ, ರಾಜು ಪೂಜಾರಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್, ಸುಭೋದ್ ರಾವ್, ಸಂತೋಷ್ ಕುಲಾಲ್, ವೈ. ಸುಕುಮಾರ್, ಗೋಪಿನಾಥ್ ಭಟ್, ಪ್ರಶಾಂತ್ ಜತ್ತನ್ನ, ಕಿಶೋರ್ ಎರ್ಮಾಳು ಉಪಸ್ಥಿತರಿದ್ದರು.