ಬಂಟ್ವಾಳ, ಜೂ. 23: ಮಣಿನಾಲ್ಕೂರು ಗ್ರಾಮದ ಅರ್ಬಿ ನಿವಾಸಿ ಯಮುನಾ ಪೂಜಾರಿ ಅವರ ಕುಟುಂಬಕ್ಕೆ ದೇವಶ್ಯಮೂಡೂರು ಹಾಗೂ ಮಣಿನಾಲ್ಕೂರು ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ನಿರ್ಮಿಸಲಾದ ನೂತನ ಮನೆಯ ಗೃಹಪ್ರವೇಶ ಸಮಾರಂಭ ಭಾನುವಾರ ನಡೆಯಿತು.
ಯಮುನಾ ಪೂಜಾರಿ ಅವರು ಪುತ್ರಿಯೊಂದಿಗೆ ವಾಸಿಸುತ್ತಿದ್ದು, ಹೊರಗಡೆ ತೆರಳಿ ದುಡಿಯಲು ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಅವರ ಜೀವನೋಪಾಯಕ್ಕೆ ನೆರವಾಗುವ ಉದ್ದೇಶದಿಂದ ಬಿಜೆಪಿ ಕಾರ್ಯಕರ್ತರು ಸುಮಾರು 50 ಮಲ್ಲಿಗೆ ಗಿಡಗಳನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸಾನ್ವಿ ಪೂಜಾರಿ ಕೋಡ್ಲೆ ಅವರನ್ನು ಸನ್ಮಾನಿಸಿ, ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡಲಾಯಿತು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬಂಟ್ವಾಳ ಬಿಜೆಪಿ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್, ಸಂದೇಶ್ ಶೆಟ್ಟಿ ಅರೆಬೆಟ್ಟು, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ ಹಾಗೂ ದಿನೇಶ್ ಅಮ್ಟೂರು, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಸಾಮಾಜಿಕ ಮುಂದಾಳು ಡಾ. ರವಿ ಕಕ್ಯಪದವು, ಕಾರಿಂಜ ಕ್ಷೇತ್ರ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪುಳಿಮಜಲು, ವಿಶ್ವ ಹಿಂದೂ ಪರಿಷತ್ ಬಂಟ್ವಾಳ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.