ದಾವಣಗೆರೆ: ಜಿಲ್ಲೆಯ ಹರಿಹರದಲ್ಲಿ ಬಂಧಿತನಾಗಿರುವ ಉತ್ತರ ಪ್ರದೇಶ ಮೂಲದ 20 ವರ್ಷದ ಶಂಕಿತ ಉಗ್ರ ಸುಹೇಲ್ ವಿಚಾರಣೆ ವೇಳೆ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಂಬ್ ಸ್ಫೋಟ ನಡೆಸುವ ಉದ್ದೇಶ ಹೊಂದಿದ್ದಾಗಿ ತಿಳಿಸಿರುವುದಾಗಿ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಹರಿಹರ ಕೈಗಾರಿಕಾ ಪ್ರದೇಶದ ಖಾಸಗಿ ಕಾರ್ಖಾನೆಯೊಂದರಲ್ಲಿ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದ ಸುಹೇಲ್ ತನ್ನ ನೈಜ ಚಟುವಟಿಕೆಗಳನ್ನು ಮರೆಮಾಚಿಕೊಂಡಿದ್ದ ಎನ್ನಲಾಗಿದೆ. ಆತನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಈ ಸಂಬಂಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತನಿಖೆ ವೇಳೆ ಸುಹೇಲ್ ಬಳಿಯಿದ್ದ ಮೊಬೈಲ್ ಫೋನ್ನಲ್ಲಿ ‘ರಾಣಾ ಭಾಯ್’ ಹೆಸರಿನಲ್ಲಿ ಪಾಕಿಸ್ತಾನದ ಕೋಡ್ ಹೊಂದಿರುವ ದೂರವಾಣಿ ಸಂಖ್ಯೆ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ಮೊಬೈಲ್ ಗ್ಯಾಲರಿಯಲ್ಲಿ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡಿರುವ ಫೋಟೋಗಳೂ ಪತ್ತೆಯಾಗಿರುವುದಾಗಿ ಹೇಳಲಾಗಿದೆ.
ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಶಂಕಿತನ ಸಂಪರ್ಕ ಜಾಲ, ಉದ್ದೇಶ ಹಾಗೂ ಇತರ ಮಾಹಿತಿಗಳ ಬಗ್ಗೆ ಪರಿಶೀಲನೆ ಮುಂದುವರಿದಿದೆ.