ಕಾರ್ಕಳ, ಜೂ. 29: ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಪ್ರತಿಯೊಂದು ಮಗುವಿಗೂ ಪಲ್ಸ್ ಪೋಲಿಯೊ ಲಸಿಕೆ ಕಡ್ಡಾಯವಾಗಿ ನೀಡಬೇಕು. ಲಸಿಕೆ ನೀಡುವುದರಿಂದ ಮಕ್ಕಳ ಆರೋಗ್ಯ ಸದೃಢವಾಗಿದ್ದು, ಪೋಲಿಯೊ ನಿರ್ಮೂಲನೆಗೆ ಸಹಕಾರಿಯಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಹೇಳಿದರು.
ಅವರು ಕಾರ್ಕಳ ತಾಲೂಕಿನ ಕುಕ್ಕುಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನವನ್ನು ಮಗುವಿಗೆ ಲಸಿಕೆ ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶ್ರೀವಿದ್ಯಾ ಎಸ್. ಕಿದಿಯೂರು ಮಾತನಾಡಿ, ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ಲಸಿಕೆಯ ಮಹತ್ವವನ್ನು ವಿವರಿಸಿದರು. ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳಿಗೆ ನಿಗದಿತ ವೇಳಾಪಟ್ಟಿಯಂತೆ ಎಲ್ಲಾ ಲಸಿಕೆಗಳನ್ನು ತಪ್ಪದೇ ಹಾಕಿಸಬೇಕು ಎಂದು ಕರೆ ನೀಡಿದರು.
ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಕುಮುದಾವತಿ ಕಾರ್ಯಕ್ರಮವನ್ನು ಸ್ವಾಗತಿಸಿ, ವಂದಿಸಿದರು.
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪೋಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು.


