ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ರಹ್ಮಾವರ ಸಮೀಪ ಸೋಮವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರಾವಳಿಯ ಖ್ಯಾತ ಹುಲಿ ವೇಷದ ಕಲಾವಿದ ಮಂಜುನಾಥ್ (43) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಉಡುಪಿಯ ಸಂತೆಕಟ್ಟೆ ಲಕ್ಷ್ಮೀನಗರ ನಿವಾಸಿ ಮಂಜುನಾಥ್ ಎಂದು ಗುರುತಿಸಲಾಗಿದೆ. ಗೋವಾದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಇನ್ನೋವಾ ಕಾರಿನಲ್ಲಿ ಐವರು ಉಡುಪಿಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಉಡುಪಿ ಕಡೆಗೆ ಸಂಚರಿಸುತ್ತಿದ್ದ ವೇಗದೂತ ಬಸ್ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ಇನ್ನೋವಾ ಕಾರು ನಿಯಂತ್ರಣ ತಪ್ಪಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಮಂಜುನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಉಳಿದ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಜುನಾಥ್ ಕರಾವಳಿಯ ಪ್ರಸಿದ್ಧ ಹುಲಿ ವೇಷದ ಕಲಾವಿದರಾಗಿದ್ದು, ಹಲವು ವರ್ಷಗಳಿಂದ ಹುಲಿ ವೇಷಧಾರಿಗಳಿಗೆ ಆಕರ್ಷಕ ಪೈಂಟಿಂಗ್ ಹಾಗೂ ವಿನೂತನ ಕಲಾಕೃತಿಗಳನ್ನು ರೂಪಿಸುವ ಮೂಲಕ ವಿಶೇಷ ಗುರುತಿಸಿಕೊಂಡಿದ್ದರು. ಅವರ ಅಕಾಲಿಕ ನಿಧನಕ್ಕೆ ಕಲಾ ವಲಯದಲ್ಲಿ ತೀವ್ರ ಸಂತಾಪ ವ್ಯಕ್ತವಾಗಿದೆ.
ಘಟನೆ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕುರಿತು ತನಿಖೆ ಮುಂದುವರಿದಿದೆ.


