ಪುತ್ತೂರು, ಜು. 7: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ವತಿಯಿಂದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರ ತರಬೇತಿ ಕಾರ್ಯಾಗಾರವು ಬೊಳ್ವಾರದ ವಿಶ್ವಕರ್ಮ ಸಮುದಾಯ ಭವನದಲ್ಲಿ ಸೋಮವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್, ರಾಜ್ಯಾದ್ಯಂತ 10 ಸಾವಿರಕ್ಕೂ ಅಧಿಕ ಸ್ವಯಂಸೇವಕರನ್ನು ಹೊಂದಿರುವ ಶೌರ್ಯ ತಂಡವು ವಿಪತ್ತು ಸಂದರ್ಭಗಳಲ್ಲಿ ಅಮೂಲ್ಯ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಕಮಾಂಡರ್ ಶಾಂತಿಲಾಲ್ ಜಟಿಯ ಮಾತನಾಡಿ, ಶೌರ್ಯ ತಂಡದ ಸದಸ್ಯರ ಸೇವಾ ಮನೋಭಾವ ಶ್ಲಾಘನೀಯವಾಗಿದ್ದು, ಅವರ ಸೇವೆ ದೇಶಸೇವೆಗೆ ಸಮಾನವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬಳಿಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಸದಸ್ಯ ಸುಭಾಷ್ ಶಿಂಧೆ ನೇತೃತ್ವದಲ್ಲಿ ತುರ್ತು ಪರಿಸ್ಥಿತಿಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆ ಸಹಿತ ತರಬೇತಿ ನೀಡಲಾಯಿತು. ಇದೇ ವೇಳೆ ಸುಳ್ಯ, ಪುತ್ತೂರು ಹಾಗೂ ಕಡಬ ಯೋಜನಾ ಕಚೇರಿ ವ್ಯಾಪ್ತಿಯ ಶೌರ್ಯ ತಂಡದ ಮಾಸ್ಟರ್ ಹಾಗೂ ಕ್ಯಾಪ್ಟನ್ಗಳನ್ನು ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಮಾಜಿ ರಾಜ್ಯಾಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ, ಪುತ್ತೂರು ತಾಲೂಕು ಅಧ್ಯಕ್ಷ ಸತೀಶ್ ನಾಯ್ಕ್ ಸೇರಿದಂತೆ ವಿವಿಧ ಯೋಜನಾಧಿಕಾರಿಗಳು, ಜನಜಾಗೃತಿ ವೇದಿಕೆ ಪದಾಧಿಕಾರಿಗಳು ಹಾಗೂ ಶೌರ್ಯ ತಂಡದ ಸ್ವಯಂಸೇವಕರು ಉಪಸ್ಥಿತರಿದ್ದರು.


