ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಅಣ್ಣಾಮಲೈ ಭೇಟಿ

ಉಡುಪಿ : ತಮಿಳುನಾಡಿನ ಮುಖ್ಯಮಂತ್ರಿ ನಟ ವಿಜಯ್‌ ಮತ್ತು ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್‌ ಭೇಟಿಯ ಬಳಿಕ ಉಡುಪಿ ಜಿಲ್ಲೆಯ ಪ್ರಸಿದ್ಧ ಶಕ್ತಿ ಪೀಠವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಖ್ಯಾತ ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡಿನ ರಾಜಕೀಯ ನಾಯಕ ಕೆ. ಅಣ್ಣಾಮಲೈ ಅವರು ಮಂಗಳವಾರ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.


ದೇವಳಕ್ಕೆ ಆಗಮಿಸಿದ ಅಣ್ಣಾಮಲೈ ಅವರನ್ನು ದೇವಳದ ಆಡಳಿತ ಮಂಡಳಿ ಹಾಗೂ ಅರ್ಚಕ ವೃಂದ ಆತ್ಮೀಯವಾಗಿ ಸ್ವಾಗತಿಸಿತು. ಬಳಿಕ ಅವರು ದೇವಿಯ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ರಾಜ್ಯ ಹಾಗೂ ದೇಶದ ಸುಖ-ಶಾಂತಿ, ಸಮೃದ್ಧಿಗಾಗಿ ಪ್ರಾರ್ಥಿಸಿದರು. ದರ್ಶನದ ನಂತರ ದೇವಳದ ವತಿಯಿಂದ ಶ್ರೀ ದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.


ಇತ್ತೀಚಿನ ರಾಜಕೀಯ ಬೆಳವಣಿಗೆಯಲ್ಲಿ ಅಣ್ಣಾಮಲೈ ಸಾಕಷ್ಟು ಸುದ್ದಿಯಲ್ಲಿದ್ದಾರೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಅವರು, ಬಳಿಕ ವಿ ದಿ ಲೀಡರ್‌ ಎಂಬ ಹೊಸ ರಾಜಕೀಯ ಚಳವಳಿಯನ್ನು ಆರಂಭಿಸಿದ್ದಾರೆ. ಈ ಚಳವಳಿಯು ಮುಂದಿನ ದಿನಗಳಲ್ಲಿ ರಾಜಕೀಯ ಪಕ್ಷವಾಗಿ ರೂಪುಗೊಂಡು ತಮಿಳುನಾಡಿನ ರಾಜಕೀಯದಲ್ಲಿ ಹೊಸ ಪರ್ಯಾಯವನ್ನು ನೀಡುವ ಉದ್ದೇಶ ಹೊಂದಿದೆ ಎಂದು ಅಣ್ಣಾಮಲೈ ಇತ್ತೀಚೆಗೆ ಘೋಷಿಸಿದ್ದಾರೆ. ಇದೇ ಹಿನ್ನಲೆಯಲ್ಲಿ ಅವರು ಕೊಲ್ಲೂರು ಭೇಟಿ ನೀಡಬಹುದು ಎನ್ನುವುದು ರಾಜಕೀಯ ಲೆಕ್ಕಾಚಾರ.

SHARE
Loading spinner

Leave a Reply

Your email address will not be published. Required fields are marked *

error: Content is protected !!